(ನ್ಯೂಸ್ ಕಡಬ) newskadaba.com ಫೆ. 14: ಪ್ರಯಾಗರಾಜ್ನಲ್ಲಿ ನಡೆದ ಮಹಾ ಕುಂಭಮೇಳದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು 53 ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಕೊಂಡಿದ್ದಾರೆ. ನಕಲಿ ಸುದ್ದಿ ಹರಡುವುದನ್ನು ತಡೆಯುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ನೀಡಿದ್ದ ನಿರ್ದೇಶನದ ಮೇರೆಗೆ ಈ ಕ್ರಮ ಜರುಗಿಸಲಾಗಿದೆ.
ಕಿಡಿಗೇಡಿಗಳು, ಕುಂಭ ಮೇಳಕ್ಕೆ ಸಂಬಂಧ ಕಲ್ಪಿಸಿ ಹಳೆಯ ವಿಡಿಯೊಗಳು, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದನ್ನು ಪತ್ತೆ ಹಚ್ಚಲಾಗಿದೆ. ಈ ಪೋಸ್ಟ್ಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಂತಹವುಗಳಿಗೆ ಕಡಿವಾಣ ಹಾಕಲು ರಾಜ್ಯ ಪೊಲೀಸ್ ಹಾಗೂ ತಜ್ಞರನ್ನೊಳಗೊಂಡ ಏಜೆನ್ಸಿಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಸಮಗ್ರ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.