(ನ್ಯೂಸ್ ಕಡಬ) newskadaba.com ಫೆ. 19. ಉಡುಪಿ: ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್ಎಂ ರೇವಣ್ಣ ಅವರು ಮಂಗಳವಾರ ಹೇಳಿದರು.

ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
4 ಲಕ್ಷ ಕೋಟಿ ರೂ. ಬಜೆಟ್ ಹೊಂದಿರುವ ಕರ್ನಾಟಕದಂತಹ ರಾಜ್ಯಕ್ಕೆ, ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ.ಗಳನ್ನು ಕಾಯ್ದಿರಿಸುವುದು ದೊಡ್ಡ ವಿಷಯವಲ್ಲ ಎಂದು ಹೇಳಿದರು. ಈ ಮೂಲಕ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂಬ ವದಂತಿಗಳನ್ನು ತಳ್ಳಿಹಾಕಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ಎಲ್ಲಾ ವದಂತಿಗಳು ಸುಳ್ಳು. ಕರ್ನಾಟಕದ ಗ್ಯಾರಂಟಿ ಯೋಜನೆಯಿಂದ ಪ್ರೇರಿತರಾದ ಬಿಜೆಪಿಯವರು ಅವರ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವರು ಕಾಂಗ್ರೆಸ್ ಯೋಜನೆಗಳನ್ನು ವಿರೋಧಿಸಿದಂತೆ ನಾವು ವಿರೋಧಿಸುವುದಿಲ್ಲ ಎಂದು ಹೇಳಿದರು.