(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ (Child Marriage) ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ?, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ ಪಿಡಿಒಗಳು, ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮುಖ್ಯಮಂತ್ರಿಗಳು ಮಾತನಾಡಿದರು.

ಶೇಕಡಾವಾರು ತೀವ್ರ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಜಿಲ್ಲೆಗಳ ಪ್ರತೀ ವರ್ಷ ನಿಮ್ಮ ನಿಮ್ಮ ಜಿಲ್ಲೆಗಳಲ್ಲಿ ಶೇ1 ರಷ್ಟು ಕಡಿಮೆ ಮಾಡಿಕೊಂಡು ಹೋಗಲು ಸಾಧ್ಯವಿದೆ. ಒಂದೇ ಸಾರಿಗೆ ನಿಲ್ಲಿಸಲು ಸಾಧ್ಯವಿಲ್ಲ ಎನ್ನುವುದಕ್ಕೆ ಸಾಮಾಜಿಕ ಕಾರಣಗಳೂ ಇವೆ. ಆದ್ದರಿಂದ ಪ್ರತೀ ವರ್ಷ ಶೇ.1 ರಷ್ಟು ಪ್ರಮಾಣ ಕಡಿಮೆ ಮಾಡಿಕೊಂಡು ಬಂದರೆ ಅಪೌಷ್ಟಿಕ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎನ್ನುವ ಸೂಚನೆ ನೀಡಿದರು. ಬೀದರ್, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಿಎಂ ಈ ಸೂಚನೆ ನೀಡಿದರು.
ಮಕ್ಕಳ ಹಿಮೋಗ್ಲೋಬಿನ್ ಪ್ರಮಾಣ ಸೇರಿ ಅವರ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಹಾಲು, ಮೊಟ್ಟೆ, ಮಾತ್ರೆ ಎಲ್ಲವನ್ನೂ ಕೊಡುತ್ತಿದ್ದರೂ ಏಕೆ ಕೆಲವು ಕಡೆ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಮಟ್ಟ ಮಾತ್ರ ಸುಧಾರಿಸುತ್ತಿಲ್ಲ ಎನ್ನುವ ಬಗ್ಗೆ ವೈಜ್ಞಾನಿಕ ವರದಿ ನೀಡಿ, ವರದಿ ಆಧಾರದಲ್ಲಿ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಬಹುದು ಎಂದು ಸಿಎಂ ತಿಳಿಸಿದರು.