ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೇರಿ ನಾಲ್ವರ ಬಂಧನ; ಪೊಲೀಸರಿಂದ ತೀವ್ರ ವಿಚಾರಣೆ

(ನ್ಯೂಸ್ ಕಡಬ) newskadaba.com, ಜೂ.06. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದೀಗ ಈ ಸಂಬಂಧ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ಪರಾರಿಯಾಗುತ್ತಿದ್ದ ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಬಂಧಿಸಲಾಗಿದೆ.

ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಬಂಧಿತರನ್ನು ತೀವ್ರತರದ ವಿಚಾರಣೆಗೆ ಒಳಪಡಿಸಲಾಗಿದೆ. ಖುದ್ದು ಸಿಸಿಬಿ ಡಿಸಿಪಿ ಅಕ್ಷಯ್ ಎಂ. ನೇತೃತ್ವದಲ್ಲಿ ಇದೀಗ ಕಬ್ಬನ್ ಪಾರ್ಕ್ ಠಾಣೆಯಲ್ಲಿ ನಾಲ್ವರ ವಿಚಾರಣೆ ನಡೆಸಲಾಗುತ್ತಿದೆ.

Scroll to Top