(ನ್ಯೂಸ್ ಕಡಬ) newskadaba.com ಜೂ. 27. ಆರ್’ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿದ ಪ್ರಕರಣಕ್ಕೆ ಸಬಂಧಿಸಿದಂತೆ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಗುರುವಾರದಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದರು.
ಈಗಾಗಲೇ ಜಿಲ್ಲಾಧಿಕಾರಿ ಜಿ.ಜಗದೀಶ್, ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಬಿ.ದಯಾನಂದ್ ಇದೀಗ 3 ವಾರಗಳ ಬಳಿಕ ಗುರುವಾರದಂದು ಮಧ್ಯಾಹ್ನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು. ಇವರನ್ನು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ಮಾಡಲಾಗಿದೆ.
ವಿಚಾರಣೆ ವೇಳೆ ಕಾರ್ಯಕ್ರಮ ಆಯೋಜನೆಗೆ ಕೆಎಸ್ ಸಿಎ ಸೇರಿ ಸಂಬಂಧಿಸಿದ ಸಂಸ್ಥೆಗಳು ಅನುಮತಿ ಕೋರಿರುವುದು, ಭದ್ರತಾ ಕ್ರಮಗಳು ಹಾಗೂ ಸಾವು ನೋವಿನ ಮಾಹಿತಿ ಸೇರಿ ಇನ್ನಿತರ ವಿಚಾರಗಳ ಬಗ್ಗೆ ವಿಚಾರಣಾಧಿಕಾರಿ ಹೇಳಿಕೆ ಪಡೆದುಕೊಂಡರು ಎಂದು ತಿಳಿದುಬಂದಿದೆ.













