(ನ್ಯೂಸ್ ಕಡಬ) newskadaba.com ಜೂ.28: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆಯಲ್ಲಿ ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಅರ್ಜುನನ ಸ್ಮಾರಕವನ್ನು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಶುಕ್ರವಾರ ಲೋಕಾರ್ಪಣೆ ಮಾಡಿದರು.
ಈ ವೇಳೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಹಂತ-ಹಂತವಾಗಿ ಈ ಸ್ಮಾರಕವನ್ನು ಅಭಿವೃದ್ಧಿಪಡಿಸಲಾಗುವುದು. ಅರ್ಜುನ ಆನೆ ಪಾಲ್ಗೊಂಡ ವಿವಿಧ ಕಾರ್ಯಾಚರಣೆಗಳ ಚಿತ್ರ, ದಸರಾ ಮಹೋತ್ಸವದ ಅಪರೂಪದ ಕ್ಷಣಗಳ ಚಿತ್ರ ಎಲ್ಲವನ್ನೂ ಇಲ್ಲಿ ಪ್ರದರ್ಶಿಸುವ ಮೂಲಕ ಅರ್ಜುನ ಆನೆಯ ಶೌರ್ಯ, ಸಾಹಸ ಎಲ್ಲರಿಗೂ ತಿಳಿಯುವಂತೆ ಮಾಡಲಾಗುವುದು” ಎಂದರು.
“ಈ ಸ್ಮಾರಕ 2.98 ಮೀಟರ್ ಎತ್ತರ, 3.74 ಮೀಟರ್ ಉದ್ದ ಇದೆ. ಅರ್ಜುನ ಆನೆಯ ಸ್ಮಾರಕ 650 ಕೆ.ಜಿ. ತೂಕ ಇದೆ. ಇದನ್ನು ಕಲಾವಿದ ಮಂಗಳೂರು ಮೂಲದ ಧನಂಜಯ ಅವರು ನಿರ್ಮಿಸಿದ್ದು, ಅರ್ಜುನ ಆನೆಯೇ ನಮ್ಮ ಮುಂದೆ ನಿಂತಿರುವಂತೆ ಕಾಣುತ್ತದೆ. ಇದಕ್ಕಾಗಿ ಕಲಾವಿದರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.
ಎಂಟು ಬಾರಿ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಎಲ್ಲ ಕನ್ನಡಿಗರ ಹೃದಯದಲ್ಲಿ ನೆಲೆಸಿದ್ದಾನೆ” ಎಂದು ಸಚಿವರು ಹೇಳಿದರು.













