(ನ್ಯೂಸ್ ಕಡಬ) newskadaba.com ಜೂ.28: ಹೈದರಾಬಾದ್ನಲ್ಲಿ ಪ್ರಸಿದ್ಧ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಸ್ತುತ ಟಿ ನ್ಯೂಸ್(T News) ಚಾನೆಲ್ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಶ್ವೇಚ್ಛಾ ತನ್ನ ತಾಯಿ ಶ್ರೀದೇವಿ ಅವರೊಂದಿಗೆ ರಾಮ್ ನಗರದಲ್ಲಿ ವಾಸಿಸುತ್ತಿದ್ದರು. ಆದಾಗ್ಯೂ, ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಈ ಹಿಂದೆ ಟಿವಿ9 ತೆಲುಗಿನಲ್ಲಿಯೂ ಸುದ್ದಿ ನಿರೂಪಕಿಯಾಗಿ ಕೆಲಸ ಮಾಡಿದ್ದರು. ಆದಾಗ್ಯೂ, ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮೊದಲು, ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಬುದ್ಧನ ಉಲ್ಲೇಖವನ್ನು ಕ್ಯಾಪ್ಷನ್ ಬರೆದುಕೊಂಡಿದ್ದಾರೆ. “ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ” ಎಂದು ಅವರು ಬರೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಸಾವಿನ ಹಿಂದೆ ಕೌಟುಂಬಿಕ ಸಮಸ್ಯೆಗಳಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಇದನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.









