(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2025 ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
2025ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಸಂಬಂಧ ಜುಲೈ 7 ರಿಂದ ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಪಡೀಲ್ ಪ್ರಜಾ ಸೌಧ, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಗೂ ವಿಶ್ವವಿದ್ಯಾಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾನದಂಡಗಳು: ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ/ ಡಿಪ್ಲೊಮಾ/ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡಿದವರು ಅರ್ಜಿ ಸಲ್ಲಿಸಬಹುದು. 2023, 2024 ಹಾಗೂ 2025ರ ವರ್ಷದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ 2 ವರ್ಷ ಗರಿಷ್ಠ ಅವಧಿಯವರೆಗೆ ಮಾತ್ರ ಈ ಭತ್ಯೆ ಸಿಗಲಿದೆ.
ಅರ್ಜಿ ಸಲ್ಲಿಸುವ ವಿಧಾನ: ವೆಬ್ಸೈಟ್ https://sevasindhugs.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು ಮೂಲಕವೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.
ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ ಪ್ರತಿ 3 ತಿಂಗಳಿಗೆ ಒಂದು ಬಾರಿ 25ನೇ ತಾರೀಖಿನೊಳಗಡೆ ವೆಬ್ಸೈಟ್ https://sevasindhugs.karnataka.gov.in ಮೂಲಕ ಸ್ವಯಂ ಘೋಷಣೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













