(ನ್ಯೂಸ್ ಕಡಬ) newskadaba.com, ಆ.07: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಆ.5ರಂದು ಮೇಘಸ್ಫೋಟ ಸಂಭವಿಸಿದೆ. ಇದರಿಂದ ದಿಢೀರ್ ಪ್ರವಾಹ ಸೃಷ್ಠಿಯಾಗಿ ಮನೆಗಳು, ಹೋಟೆಲ್ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಭಾರೀ ಮಳೆಯಿಂದ ಉತ್ತರಕಾಶಿ-ಹರ್ಸಿಲ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಜೆಸಿಬಿ ಯಂತ್ರಗಳ ಸಹಾಯದಿಂದ ರಸ್ತೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಭೂಕುಸಿತದ ನಡುವೆ ಭಾರೀ ಮಳೆ ಮುಂದುವರಿದ ಕಾರಣ ಭಾರತೀಯ ಹವಾಮಾನ ಇಲಾಖೆ ಹರಿದ್ವಾರ, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಇತರ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಉತ್ತರಾಖಂಡ ಸರ್ಕಾರವು ಡೆಹ್ರಾಡೂನ್, ನೈನಿತಾಲ್, ತೆಹ್ರಿ, ಚಮೋಲಿ, ರುದ್ರಪ್ರಯಾಗ, ಚಂಪಾವತ್, ಪೌರಿ, ಅಲ್ಮೋರಾ ಮತ್ತು ಬಾಗೇಶ್ವರ್ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದೆ.










