(ನ್ಯೂಸ್ ಕಡಬ) newskadaba.com, ಆ.07: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಇದು 218ನೇ ವರ್ಷದ ಫ್ಲವರ್ ಶೋ ಆಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದರು.
ಕಿತ್ತೂರು ರಾಣಿ ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಸಂಗೊಳ್ಳಿ ರಾಯಣ್ಣ ಅವರ ಪ್ರಾಧಿಕಾರ ಮಾಡಿದ್ದೇವೆ ಎಂದು ಹೇಳಿದರು.
ಇಂದು ಈ ವೀರರನ್ನು ಸ್ಮರಿಸಬೇಕು. ಇಂದು ತೋಟಗಾರಿಕೆ ಇಲಾಖೆಯಿಂದ ಸ್ವಾತಂತ್ರ್ಯ ವೀರರಿಗೆ ಗೌರವ ಸಲ್ಲಿಸಲಾಗಿದೆ. ದೇಶಕ್ಕಾಗಿ ಹೋರಾಡಿ ಮಡಿದವರನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ತಿಳಿಸಿದರು.













