(ನ್ಯೂಸ್ ಕಡಬ) newskadaba.com, ಆ.18: ನವದೆಹಲಿ: ‘ಮತ ಕಳ್ಳತನʼ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ.
ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ (I.N.D.I.A) ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕರೊಬ್ಬರು, ಇಂಡಿಯಾ ಮೈತ್ರಿಕೂಟದ ಎಲ್ಲಾ ಸದಸ್ಯರು ಈ ಪ್ರಸ್ತಾಪವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಕಾನೂನು ವಿಧಾನಗಳ ಕುರಿತು ಶೀಘ್ರದಲ್ಲೇ ಚರ್ಚೆ ನಡೆಯಲಿದೆ. ಈ ಪ್ರಕ್ರಿಯೆಯು ನ್ಯಾಯಾಧೀಶರ ಮಹಾಭಿಯೋಗದಂತೆಯೇ ಇರಲಿದೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ, ಪರಿಣಾಮದ ಕುರಿತು ಲೋಕಸಭೆಯಲ್ಲಿ 2 ದಿನಗಳಕಾಲ ವಿಶೇಷ ನಡೆಯಲಿದ್ದು, ಈ ವಿಶೇಷ ಚರ್ಚೆಯಲ್ಲಿ ಸರ್ಕಾರದೊಂದಿಗೆ ಸಹಕರಿಸದಿರಲು ವಿರೋಧ ಪಕ್ಷಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ














