(ನ್ಯೂಸ್ ಕಡಬ) newskadaba.com ಆ. 20 ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕ ಕೊರತೆ ಸೃಷ್ಟಿ ಮಾಡಿದ್ದು, ಮೂಲಸೌಕರ್ಯಗಳ ಅನುದಾನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂಬುದನ್ನು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿ (ಸಿಎಜಿ) ವ್ಯಾಖ್ಯಾನಿಸಿದೆ.
ಸಿಎಂ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.
ವರದಿಯಲ್ಲಿ 2023-24ರಲ್ಲಿನ ರಾಜ್ಯದ ಆರ್ಥಿಕ ಪರಿಸ್ಥಿತಿ, ಪಂಚ ಗ್ಯಾರಂಟಿಗಳಿಂದ ಎದುರಾಗುತ್ತಿರುವ ಆರ್ಥಿಕ ಪರಿಣಾಮಗಳ ಕುರಿತಂತೆ ಹಲವು ಅಂಶಗಳನ್ನು ವಿವರಿಸಲಾಗಿದೆ.
ಈ ಯೋಜನೆಗಳಿಗೆ ಹೆಚ್ಚಿನ ವೆಚ್ಚ ಮಾಡಿದ ಪರಿಣಾಮ 2023-24ನೇ ಸಾಲಿನಲ್ಲಿ 9,271 ಕೋಟಿ ರು. ರಾಜಸ್ವ ಕೊರತೆ ಉಂಟಾಗಿದೆ. ಅಲ್ಲದೆ, ವಿತ್ತೀಯ ಕೊರತೆ 65,522 ಕೋಟಿ ರೂ.ಗೆ ಏರಿಕೆಯಾಗುವಂತಾಗಿದೆ ಎಂದು ಸಿಎಜಿ ವ್ಯಾಖ್ಯಾನಿಸಿದೆ.
ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆಯನ್ನು ಸರಿದೂಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂ. ನಿವ್ವಳ ಮಾರುಕಟ್ಟೆ ಸಾಲವನ್ನು ಪಡೆದುಕೊಂಡಿದೆ. 2022-23ಕ್ಕೆ ಹೋಲಿಸಿದರೆ 37 ಸಾವಿರ ಕೋಟಿ ರೂ. ಹೆಚ್ಚಿನ ನಿವ್ವಳ ಮಾರುಕಟ್ಟೆ ಸಾಲ ಪಡೆಯಲಾಗಿದೆ. ಗ್ಯಾರಂಟಿ ಯೋಜನೆಗಳ ಕಾರಣದಿಂದಲೇ ಬಂಡವಾಳ ವೆಚ್ಚವನ್ನು 5,229 ಕೋಟಿ ರೂ. ಕಡಿಮೆ ಮಾಡಲಾಗಿದೆ ಎಂಬುದನ್ನು ವರದಿ ಯಲ್ಲಿ ಉಲ್ಲೇಖಿಸಲಾಗಿದೆ.













