(ನ್ಯೂಸ್ ಕಡಬ) newskadaba.com, ಆ.21: ಧರ್ಮಸ್ಥಳದಲ್ಲಿ ನೂರಾರು ಮೃತದೇಹ ಹೂತುಹಾಕಲಾಗಿದೆ ಎಂಬ ಆರೋಪಗಳ ಸಂಬಂಧ ಎಸ್ಐಟಿ ಶವಗಳ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ತನಿಖೆಯೊಂದಿಗೆ ದೇವಾಲಯದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಇದರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಎಂದಿದ್ದಾರೆ.
ಧರ್ಮಸ್ಥಳದ ವಿಚಾರದಲ್ಲಿ ಎಸ್ಐಟಿ ತನಿಖೆಗೆ ಬಿಜೆಪಿ ಆರಂಭದಲ್ಲೂ ಸ್ವಾಗತಿಸಿತ್ತು, ಈಗಲೂ ಅದೇ ನಿಲುವಿಗೆ ಬದ್ಧವಾಗಿದೆ. ಆದರೆ ತನಿಖೆಯ ಜೊತೆಗೆ ದೇವಸ್ಥಾನದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ರಾಜ್ಯ ಸರ್ಕಾರವೇ ಇದಕ್ಕೆ ಕುಮ್ಮಕ್ಕು ನೀಡುತ್ತಿದೆಯೋ ಎನ್ನುವ ಅನುಮಾನ ಕಾಡುತ್ತಿದೆ ಎಂದು ತಿಳಿಸಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ವಿರುದ್ಧ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಾಳೆಯಿಂದ “ಧರ್ಮದ ಉಳಿವಿಗಾಗಿ ಧರ್ಮಯುದ್ಧ” ಎಂಬ ಹೆಸರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.













