ಶಾಲಾ ಕಟ್ಟಡ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಕಟ್ಟಡದ ಒಂದು ಭಾಗ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಗಾಯಾಳುಗಳನ್ನು ದರ್ಶನ್, ಭುವನ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಈ ಕಟ್ಟಡವನ್ನು ಒಂಬತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ದೇವನಹಳ್ಳಿಯ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಲಲಿತಮ್ಮ ಅವರು ಮಾತನಾಡಿ, ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ, ಬಾಲಕ ದರ್ಶನ್ ಎಡಗಾಲಿಗೆ ಮೂಳೆ ಮುರಿತವಾಗಿದ್ದು, ತಲೆಗೆ ಗಾಯಗಳಾಗಿವೆ. ಕುಮಾರ್ ಕೂಡ ಗಾಯಗೊಂಡಿದ್ದಾನೆಂದು ತಿಳಿಸಿದ್ದಾರೆ.

ಕುಮಾರ್ ಮತ್ತು ಭುವನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡವನ್ನು 2016 ರಲ್ಲಿ ನಿರ್ಮಿಸಲಾಗಿದ್ದು, ಕುಸಿತಕ್ಕೆ ಕಾರಣವೇನೆಂಬುದನ್ನು ತಿಳಿಯಲು ಎಂಜಿನಿಯರ್‌ಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರಿಂದ ನಾವು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ನ್ಯಾಯವ್ಯಾಪ್ತಿಯ ಪೊಲೀಸರೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಬಾಲಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

Scroll to Top