(ನ್ಯೂಸ್ ಕಡಬ) newskadaba.com ಸೆ.06 : ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು. ಅಲ್ಲದೆ, ತನಿಖೆಯು ಆ ದಿಕ್ಕಿನತ್ತ ಸಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ.
ನಟಿ ಮತ್ತು ರಂಗಕರ್ಮಿ ಅರುಂಧತಿ ನಾಗ್, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಸಾಹಿತಿ ವಿಜಯಮ್ಮ, ನಟಿ ಸುಮನಾ ಕಿತ್ತೂರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಸಾಲಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಸಾಧಕರು ಧರ್ಮಸ್ಥಳದಲ್ಲಿ ಮಹಿಳೆಯರನ್ನು ಕೊಂದವರು ಯಾರು? ಎಂಬ ಅಭಿಯಾನ ಆರಂಭಿಸಿದ್ದಾರೆ.
ಅಭಿಯಾನದ ಭಾಗವಾಗಿ ಇದೀಗ ಧರ್ಮಸ್ಥಳ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕಲ್ಪಿಸಲು ಮತ್ತು ಮಹಿಳೆಯರ ಮೇಲಾಗುತ್ತಿರುವ ಶೋಷಣೆ ನಿಲ್ಲುವಂತಹ ವ್ಯವಸ್ಥೆ ರೂಪುಗೊಳ್ಳಬೇಕು. ಆ ನಿಟ್ಟಿನಲ್ಲಿ ಎಸ್ಐಟಿ ತನಿಖೆ ನಡೆಸಿ, ಸಂತ್ರಸ್ತೆಯರಿಗೆ ನ್ಯಾಯ ಕೊಡಿಸಬೇಕು ಎಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯಲಾಗಿದೆ.









