(ನ್ಯೂಸ್ ಕಡಬ) newskadaba.com, ಸೆ.11 ಬೆಳಗಾವಿ :6 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಗಂಡ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್ ಗಣಪತಿ ಕಾಂಬ್ಳೆ ಎಂದು ಗುರ್ತಿಸಲಾಗಿದೆ. ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ನಡೆದಿದೆ.
ಪ್ರಕರಣ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಲೇದ್ ಅವರು ಮಾಹಿತಿ ನೀಡಿದ್ದು, ರಾತ್ರಿ ನಮ್ಮ ಕಾಗವಾಡ್ ಪಿಎಸ್ಐಗೆ ಒಂದು ಕರೆ ಬಂದಿತ್ತು. ನನ್ನ ಪತ್ನಿಗೆ ಅಪಘಾತವಾಗಿದೆ, ನೀವು ಸಹಾಯ ಮಾಡಿ. ನಾನು ಹೆಚ್ಚಿನ ಚಿಕಿತ್ಸೆಗಾಗಿ ಕಾಗವಾಡ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇನೆ’ ಎಂದು ಕೊಲೆಯಾದ ಮಹಿಳೆಯ ಪತಿ ಪ್ರದೀಪ್ ತಿಳಿಸಿದ್ದ.
ತಕ್ಷಣ ನಮ್ಮ ಓರ್ವ ಸಿಬ್ಬಂದಿ ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ ಕಾಗವಾಡ ಆಸ್ಪತ್ರೆಯಲ್ಲಿ ಅವರು ಇರಲಿಲ್ಲ. ಹಾಗಾಗಿ ಪೊಲೀಸರು ಅವರನ್ನು ದೂರವಾಣಿ ಮುಖಾಂತರ ಸಂಪರ್ಕಿಸಿದಾಗ, ನಾನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ಬಂದಿದ್ದೇನೆ. ಪತ್ನಿ ಮರಣ ಹೊಂದಿದ್ದಾಳೆ. ನಮಗೆ ಕಾನೂನು ಪ್ರಕ್ರಿಯೆಗಳನ್ನು ಆದಷ್ಟು ಬೇಗನೆ ಮಾಡಿಕೊಡಿ. ನಾವು ಮುಂದಿನ ಕಾರ್ಯ ಮಾಡುತ್ತೇವೆ ಎಂದು ಪದೇ ಪದೇ ನಮಗೆ ಕರೆ ಮಾಡುತ್ತಿದ್ದ.












