ಕನ್ನಡ ಮಾತನಾಡಿದ್ದಕ್ಕೆ ಖಾಸಗಿ ಶಾಲೆಯಲ್ಲಿ ದಂಡ, ಪ್ರಾಧಿಕಾರ ಅಸಮಾಧಾನ



(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು : ಬೆಂಗಳೂರಿನ  ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಕನ್ನಡ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕೇವಲ ಆಂಗ್ಲ ಭಾಷೆಯಲ್ಲಿ ಮಾತ್ರ ಸಂವಹನ ನಡೆಸುವಂತೆ ಒತ್ತಡ ಹೇರಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಈ ಆಘಾತಕಾರಿ ವಿಚಾರವನ್ನು ಖಚಿತಪಡಿಸಿದ್ದು, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ.







ಬೆಂಗಳೂರಿನಲ್ಲಿ ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಲು ಶಾಲೆಯ ಆಡಳಿತ ಮಂಡಳಿ ನಿರಾಕರಿಸಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಪತ್ರ ಬರೆದಿದೆ. ಕೂಡಲೇ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರನ್ನು ವಿಚಾರಸಿ, ನೈಜತೆ ಪರಿಶೀಲಿಸಿ ಒಂದು ವಾರದೊಳಗೆ ವರದಿ ನೀಡುವಂತೆ ಹೇಳಿದೆ. ವಿಳಂಬವಾದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ.






ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರೊಬ್ಬರು ಅಧ್ಯಕ್ಷರ ಗಮನಕ್ಕೆ ತಂದ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳ ಕನ್ನಡ ವಿರೋಧಿ ನಡೆ ಮುಂದುವರೆಯುತ್ತಲೇ ಇದೆ. ನಾಡು ನುಡಿಯನ್ನು ಇಷ್ಟು ಕೇವಲವಾಗಿ ನೋಡುತ್ತಾ, ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಬಗ್ಗೆ ತುಂಬುತ್ತಿರುವ ತಾತ್ಸಾರ ಭಾವನೆ ಮೂಡುವಂತೆ ವರ್ತಿಸುತ್ತಿರುವ ಖಾಸಗಿ ಶಾಲೆಗಳ ಕೃತ್ಯ ಖಂಡನೀಯ. ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ ಇನ್ನಾದರೂ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ರಾಜ್ಯದಲ್ಲೇ ನಾಡ ಭಾಷೆಗೆ ಧಕ್ಕೆ ತರುವಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

error: Content is protected !!
Scroll to Top