(ನ್ಯೂಸ್ ಕಡಬ) newskadaba.com, ಸೆ.24 ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು 21 ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿದ ಆರೋಪ ಮೇಲೆ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಪೊಲೀಸರ ಬಂಧನಕ್ಕೊಳಪಡಿಸಿದ್ದಾರೆ,ಮಲ್ಲೇಶ್ವರಂ ಪೊಲೀಸರು ಇಬ್ಬರು ಸರ್ಕಾರಿ ವೈದ್ಯರು, ಇಬ್ಬರು ಶಿಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಸೇರಿದಂತೆ ಐದು ಜನರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಬೆಂಗಳೂರಿನ ನಂದಿನಿ ಲೇಔಟ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭರ್ಮಪ್ಪ ಕೆಬಿ (50), ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಕೊಪ್ಪಳ ಮೂಲದ ಡಿಜೆ ಸುಧಾಕರ್, ಹೊಸಪೇಟೆಯ ಎಫ್ಡಿಎ ಉಮೇಶ್ ನಾಗಪ್ಪ ಚೌಧರಿ, ಆಡಳಿತ ವೈದ್ಯಾಧಿಕಾರಿ (ಎಎಂಒ) ಡಾ. ಹರಿಪ್ರಸಾದ್ ಮತ್ತು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವ್ಯತ್ಯಾಸಗಳನ್ನು ಗಮನಿಸಿದ ನಂತರ ನಕಲಿ ಪ್ರಮಾಣಪತ್ರ ದಂಧೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.ಆರೋಪಿಗಳು ಪ್ರಮಾಣಪತ್ರಗಳನ್ನು ನೀಡಲು ಅವರು ಪ್ರತಿ ಅಭ್ಯರ್ಥಿಗೆ 5-10 ಲಕ್ಷ ರೂ. ಶುಲ್ಕ ವಿಧಿಸಿದ್ದಾರೆಂದು ತಿಳಿದುಬಂದಿದೆ













