(ನ್ಯೂಸ್ ಕಡಬ) newskadaba.com, ಸೆ.25 ಬೆಂಗಳೂರು : ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ಚಿತ್ರ ʼಮಾರುತʼ ಚಿತ್ರಕ್ಕಾಗಿ ಎಸ್. ನಾರಾಯಣ್ ಅವರೇ ಬರೆದು ಸಂಗೀತ ಸಂಯೋಜಿಸಿರುವ ʼನಮ್ಮಮ್ಮ ಸವದತ್ತಿ ಎಲ್ಲಮ್ಮʼ ಎಂಬ ಹಾಡು ನವರಾತ್ರಿಯ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಯಿತು. ಅನನ್ಯ ಭಟ್ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಹಾಡಿನಲ್ಲಿ ನಾಯಕಿ ಬೃಂದಾ ಆಚಾರ್ಯ ಅಭಿನಯಿಸಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಸಾರಸ್ವತ ಲೋಕಕ್ಕೆ ಅಪಾರ ಕೊಡಗೆ ನೀಡಿದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ನಿರ್ದೇಶಕ ಎಸ್.ನಾರಾಯಣ್ ಅವರು ʼಮಾರುತʼ ಚಿತ್ರ ಸಾಗಿ ಬಂದ ಬಗ್ಗೆ ಮಾಹಿತಿ ನೀಡಿದರು. ರೈಲಿಗೆ ಎಂಜಿನ್ ಹೇಗೆ ಮುಖ್ಯವೊ ಹಾಗೆ ನಮ್ಮ ಚಿತ್ರದ ಬಹು ಮುಖ್ಯ ಪಾತ್ರಕ್ಕೆ ಪ್ರಮುಖ ಕಲಾವಿದರೊಬ್ಬರು ಬೇಕಾಗಿತ್ತು. ಆ ಪಾತ್ರದಲ್ಲಿ ದುನಿಯಾ ವಿಜಯ್ ಅಭಿನಯಿಸಿದ್ದಾರೆ. ವಿಜಯ್ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ. ಶ್ರೇಯಸ್ ಮಂಜು, ಬೃಂದಾ ಆಚಾರ್ಯ ಅವರ ಅಭಿನಯ ಕೂಡ ಚೆನ್ನಾಗಿದೆ..
ʼಮಾರುತʼ ನೋಡುಗರಿಗೆ ಬೇಕಾಗಿರುವ ಎಲ್ಲಾ ಅಂಶಗಳನ್ನೊಳಗೊಂಡ ಒಂದು ಕೌಟುಂಬಿಕ ಚಿತ್ರ. ಈ ಚಿತ್ರದಲ್ಲಿ ಇಷ್ಟು ಮಾತ್ರ ಅಲ್ಲ. ಯುವಜನತೆಗೆ ಎಚ್ಚರ ನೀಡುವ ಉತ್ತಮ ಸಂದೇಶ ಸಹ ಇದೆ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಉಪಯೋಗವಿದೆಯೊ, ಅದಕ್ಕಿಂತ ಹೆಚ್ಚು ಅಪಾಯವಿದೆ. ಈ ನಿಟ್ಟಿನಲ್ಲಿ ಪೋಷಕರು ಯುವಜನತೆಯ ಮೇಲೆ ಹೆಚ್ಚು ಗಮನ ನೀಡಬೇಕು ಎಂಬ ಸಂದೇಶ ಸಹ ಇದೆ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಚೆನ್ನಾಗಿದೆ. ನವರಾತ್ರಿ ಸಂದರ್ಭದಲ್ಲಿ ಈ ಹಾಡು ಅನಾವರಣವಾಗಿದೆ. ಅಕ್ಟೋಬರ್ 31ಕ್ಕೆ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಎಸ್ ನಾರಾಯಣ್ ತಿಳಿಸಿದರು.













