(ನ್ಯೂಸ್ ಕಡಬ) newskadaba.com, ಅ.02 ನವದೆಹಲಿ: ಶಾಸ್ತ್ರೀಯ ಸಂಗೀತದ ದಿಗ್ಗಜ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸುಮಧುರ ಕಂಠ ಮತ್ತು ಠುಮ್ರಿ ಗಾಯನಕ್ಕೆ ಹೆಸರುವಾಸಿಯಾಗಿದ್ದ ಪಂಡಿತ್ ಮಿಶ್ರಾ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
ಕೆಲವು ದಿನಗಳ ಹಿಂದೆ ಅವರನ್ನು ಬಿಎಚ್ಯುಗೆ ದಾಖಲಿಸಲಾಯಿತು ಮತ್ತು ಚೇತರಿಕೆಯ ಲಕ್ಷಣಗಳು ಕಂಡುಬಂದ ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಇಂದು ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಅವರು ಕೊನೆಯುಸಿರೆಳೆದಿದ್ದಾರೆ. ಅವರ ಪುತ್ರಿ ನಮ್ರತಾ ಮಿಶ್ರಾ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಟೈಪ್ 2 ಮಧುಮೇಹ, ಅಧಿಕ ರಕ್ತದೊತ್ತಡ, ಅಸ್ಥಿಸಂಧಿವಾತ, ಬಿಪಿಹೆಚ್ ಮತ್ತು ಎಆರ್ಡಿಎಸ್, ಮೂತ್ರಪಿಂಡದ ತೊಂದರೆಗಳೊಂದಿಗೆ ಹೀಗೆ ಹಲವು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು ಎಂದು ನಮ್ರತಾ ತಿಳಿಸಿದ್ದಾರೆ.ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರೂ ಆಗಿರುವ ಪಂಡಿತ್ ಮಿಶ್ರಾ ಹಿಂದೂಸ್ತಾನಿ ಶಾಸ್ತ್ರೀಯ ಮತ್ತು ಅರೆ-ಶಾಸ್ತ್ರೀಯ ಸಂಗೀತದ ಪ್ರಸಿದ್ಧ ಕಲಾವಿದರಾಗಿದ್ದರು.
ಪ್ರಧಾನಿ ಮೋದಿ ಕಂಬನಿ
ಪಂಡಿತ್ ಚನ್ನುಲಾಲ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಖ್ಯಾತ ಶಾಸ್ತ್ರೀಯ ಗಾಯಕ ಪಂಡಿತ್ ಚನ್ನುಲಾಲ್ ಮಿಶ್ರಾ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಭಾರತೀಯ ಕಲೆ ಮತ್ತು ಸಂಸ್ಕೃತಿಯ ಸಮೃದ್ಧಿಗೆ ಸಮರ್ಪಿತರಾಗಿದ್ದರು. ಶಾಸ್ತ್ರೀಯ ಸಂಗೀತವನ್ನು ಜನಸಾಮಾನ್ಯರಿಗೆ ತಲುಪಿಸುವುದರ ಜೊತೆಗೆ, ಜಾಗತಿಕ ವೇದಿಕೆಯಲ್ಲಿ ಭಾರತೀಯ ಸಂಪ್ರದಾಯವನ್ನು ಸ್ಥಾಪಿಸಲು ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ” ಎಂದು ಪ್ರಧಾನಿ ಬರೆದಿದ್ದಾರೆ.








