(ನ್ಯೂಸ್ ಕಡಬ) newskadaba.com, ಅ.17 ಬಳ್ಳಾರಿ : ರೈತರು ಉತ್ಪಾದನೆ ಜೊತೆಗೆ, ಹೆಚ್ಚು ಲಾಭ ಗಳಿಸಲು ಕೃಷಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ಒತ್ತು ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿರುಗುಪ್ಪ ತಾಲೂಕಿನ ಕೊಂಚಗೇರಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ವತಿಯಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯಡಿ ₹2.54 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೃಷಿ ಸಂಸ್ಕರಣೆಗಾಗಿ ರೈತರಿಗೆ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
. ಕೇಂದ್ರ ಹಣಕಾಸು ಸಚಿವೆಯಾದ ಬಳಿಕ, ಪ್ರತಿ ಬಾರಿ ಬಜೆಟ್ ಮಂಡನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರಿಗೆ ಅನುಕೂಲವಾಗುವ ಯಾವ ವಿಧದ ಯೋಜನೆ, ಸೌಲಭ್ಯ ರೂಪಿಸುತ್ತಿದ್ದೀರಾ ಎಂದು ವಿಚಾರಿಸುವ ಮೂಲಕ ರೈತರ ಬಗೆಗಿನ ಅಪಾರ ಕಾಳಜಿ ಬಿಂಬಿಸುತ್ತಿದ್ದರು ಎಂದು ಸ್ಮರಿಸಿದರು. ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದರ ಜೊತೆಗೆ ಅವರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಬೇಕಿದೆ. ಕ.ಕ ಭಾಗದಲ್ಲಿ ರೈತ ತರಬೇತಿ ಕೇಂದ್ರಗಳನ್ನು ಆರಂಭಿಸುವುದರಿಂದ ಸಾವಿರಾರು ರೈತರಿಗೆ ಉಪಯೋಗವಾಗುತ್ತದೆ.
ಪ್ರಧಾನಮಂತ್ರಿ ಧನ ಧಾನ್ಯ ಯೋಜನೆಯಿಂದ ಆಹಾರ ಸಂಸ್ಕರಣೆ, ಮೌಲ್ಯವರ್ಧನೆ ಜೊತೆಗೆ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಈ ಯೋಜನೆಯಡಿ ದೇಶದ 100 ಜಿಲ್ಲೆಗಳು ಆಯ್ಕೆಯಾಗಿದ್ದು, ಅವುಗಳಲ್ಲಿ ಬಳ್ಳಾರಿ ಜಿಲ್ಲೆಯು ಒಂದಾಗಿದೆ. ಇದಕ್ಕಾಗಿ ಬಜೆಟ್ ನಲ್ಲಿ ಅನುದಾನ ನೀಡಲಾಗಿದೆ ಎಂದರು. ಅನ್ನದಾತರ ಭವಿಷ್ಯಕ್ಕಾಗಿ ನಾವು ಈ ಕೆಲಸ ಮಾಡಬೇಕಿದೆ. ಕಲ್ಯಾಣ ಕರ್ನಾಟಕ ಭಾಗವನ್ನು ಅಭಿವೃದ್ಧಿಪಡಿಸುವುದು ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.












