(ನ್ಯೂಸ್ ಕಡಬ) newskadaba.com, ನ.03 ಹೊಸಪೇಟೆ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆಂಬ ಆರೋಪ ಸುಳ್ಳಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ. ಗ್ಯಾರಂಟಿ ನಿಲ್ಲಿಸಲು ನಮ್ಮವರೇ ಹೇಳಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸುತಾರಾಂ ಒಪ್ಪಿಲ್ಲ. ಪಂಚ ಗ್ಯಾರಂಟಿಗಳು ಅಬಾಧಿತವಾಗಿ ಮುಂದುವರೆಯಲಿವೆ ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.ನಗರದ ಸಾಯಿಲೀಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಜಿಪಂನಿಂದ ಶನಿವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಂಚ ಗ್ಯಾರಂಟಿಯಿಂದ ರಾಜ್ಯದ ತಲಾ ಆದಾಯ ವೃದ್ಧಿ:
ರಾಜ್ಯದ ಬಡಜನರ, ರೈತರ ಮತ್ತು ಮಹಿಳೆಯರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಸಶಕ್ತರನ್ನಾಗಿಸಿವೆ. ರಾಜ್ಯದಲ್ಲಿ ಆರ್ಥಿಕ ದಿವಾಳಿ ಸೃಷ್ಟಿಯಾಗಲಿದೆ ಎಂದು ಆರೋಪಿಸಿದ್ದರು. ಆದರೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸ್ವತಃ ಮುಖ್ಯಮಂತ್ರಿಯೇ ಚಾಲನೆ ನೀಡುತ್ತಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಸಾರಿಗೆ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಕೆ, ಅನ್ನಭಾಗ್ಯ ಯೋಜನೆಯಡಿ ಬಡಕುಟುಂಬಗಳಿಗೆ ಅಹಾರ ಭದ್ರತೆ ಮತ್ತು ಕುಟುಂಬದ ಯಜಮಾನಿಯರಿಗೆ ಪ್ರತಿ ತಿಂಗಳು ₹2 ಸಾವಿರ ವಿತರಣೆ ಹಾಗೂ ಯುವಜನತೆ ಪ್ರೋತ್ಸಾಹ ಧನ ನೀಡುತ್ತಿರುವುದರಿಂದ ಸಂವಿಧಾನಾತ್ಮಕವಾದ ಆಶಯಗಳನ್ನು ಪಾಲನೆ ಮಾಡಲಾಗಿದೆ. ಇದರಿಂದ ರಾಜ್ಯದ ಜನರ ತಲಾ ಆದಾಯ ವೃದ್ಧಿಸಿದೆ.. ಇದೇ ಮಾದರಿಯನ್ನು ವಿವಿಧ ರಾಜ್ಯಗಳಲ್ಲಿ ಮಾದರಿಯನ್ನಾಗಿಸಲು ಚಿಂತನೆ ನಡೆಸುವಂತಾಗಿದೆ ಎಂದರು.












