(ನ್ಯೂಸ್ ಕಡಬ) newskadaba.com, ನ.27 ಬೆಂಗಳೂರು: ಜಾತಿ ಪ್ರಮಾಣ ಪತ್ರಗಳ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನಾಗರಿಕ ಹಕ್ಕುಗಳ ಜಾರಿ ಘಟಕ ಸ್ವಯಂಪ್ರೇರಿತವಾಗಿ ತನಿಖೆ ಕೈಗೆತ್ತಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ತಮ್ಮ ಜಾತಿ ಪ್ರಮಾಣದ ಸಿಂಧುತ್ವಕ್ಕೆ ಸಂಬಂಧ ತನಿಖೆ ನಡೆಸಲು ನಾಗರಿಕ ಹಕ್ಕುಗಳ ಜಾರಿ ವಿಭಾಗದ ಡಿವೈಎಸ್ಪಿ ಅವರಿಗೆ ನಿರ್ದೇಶನ ನೀಡಿದ್ದ ಕ್ರಮ ಪ್ರಶ್ನಿಸಿ ನಿವೃತ್ತ ಮುಖ್ಯಶಿಕ್ಷಕ ಟಿ.ಎಚ್. ಹೊಸಮನಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ನಾಗರಿಕ ಹಕ್ಕುಗಳ ಜಾರಿ ಘಟಕ ಜಾತಿ ಪ್ರಮಾಣ ಪತ್ರದ ಸಿಂಧುತ್ವದ ಕುರಿತಂತೆ ಸ್ವಯಂಪ್ರೇರಿತ ತನಿಖೆ ಕೈಗೆತ್ತಿಕೊಳ್ಳುವುದಕ್ಕೆ ಅಧಿಕಾರ ಹೊಂದಿಲ್ಲ. ಆದರೆ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನೀಡುವ ವರದಿಯ ಬಳಿಕ ತನಿಖೆ ಕೈಗೊಳ್ಳುವುದಕ್ಕೆ ಅಧಿಕಾರವಿರಲಿದೆ. ಹೀಗಾಗಿ, ಈ ಪ್ರಕರಣದಲ್ಲಿ ಅರ್ಜಿದಾರರಿಗೆ ಸಂಬಂಧಿಸಿದಂತೆ ನಾಗರಿಕ ಹಕ್ಕುಗಳ ಜಾರಿ ಘಟಕದ ನಿರ್ದೇಶನದಿಂದ ಕೈಗೊಂಡಿರುವ ಪ್ರಕ್ರಿಯೆ ಮತ್ತು ಅದರ ಬಳಿಕ ಆದ ಎಲ್ಲ ಪ್ರಕ್ರಿಯೆಗಳು ಅನೂರ್ಜಿತವಾಗಲಿದೆ ಎಂದು ಪೀಠ ತಿಳಿಸಿದೆ.












