ನ್ಯಾಷನಲ್ ಹೆರಾಲ್ಡ್ ಪ್ರಕರಣ – ಗಾಂಧಿ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್



(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬಕ್ಕೆ ದೊಡ್ಡ ತಾತ್ಕಾಲಿಕ ಪರಿಹಾರ ದೊರೆತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ದೆಹಲಿ ನ್ಯಾಯಾಲಯವು ಈ ಹಂತದಲ್ಲಿ ಸ್ವೀಕರಿಸಲು ನಿರಾಕರಿಸಿದೆ.





ಆದರೆ ಪ್ರಕರಣದ ತನಿಖೆಯನ್ನು ಮುಂದುವರಿಸಬೇಕೆಂದು ನ್ಯಾಯಾಲಯ ಇಡಿಗೆ ಸೂಚಿಸಿದೆ. ಚಾರ್ಜ್‌ಶೀಟ್‌ನ ವಿಷಯದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲು ನಿರಾಕರಿಸಿದ್ದು, ಇದು ಖಾಸಗಿ ದೂರನ್ನು ಆಧರಿಸಿರುವುದರಿಂದ ಹಾಗೂ ಈ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿದೆ. ಅಗತ್ಯ ಕಾನೂನು ಹಂತಗಳನ್ನು ಪೂರ್ಣಗೊಳಿಸಿ ಮತ್ತೆ ತನಿಖೆ ನಡೆಸುವಂತೆ ಇಡಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.






ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಏಪ್ರಿಲ್ 15ರಂದು ಇಡಿ ಆರೋಪಪಟ್ಟಿ ಸಲ್ಲಿಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯಾ ಲಿಮಿಟೆಡ್ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ಇಡಿ ಆರೋಪಿಸಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದರ ಸಂಬಂಧಿತ ಆಸ್ತಿಗಳಿಗೆ ಸಂಬಂಧಿಸಿದಂತೆ ಗಾಂಧಿ ಕುಟುಂಬವು ದೊಡ್ಡ ಪ್ರಮಾಣದ ಕಪ್ಪು ಹಣವನ್ನು ಅಕ್ರಮವಾಗಿ ವರ್ಗಾಯಿಸಿದೆ ಎಂದು ಇಡಿ ತನ್ನ ಆರೋಪದಲ್ಲಿ ಹೇಳಿದೆ. ಈ ಮೂಲಕ ಸುಮಾರು 142 ಕೋಟಿ ರೂ. ಲಾಭ ಗಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ತೀವ್ರ ಆರ್ಥಿಕ ಸಂಕಷ್ಟದ ಕಾರಣ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು 2008ರಲ್ಲಿ ಮುಚ್ಚಲಾಯಿತು. ಬಳಿಕ 2010ರಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಸ್ಥಾಪಿಸಿದ ಯಂಗ್ ಇಂಡಿಯನ್ ಕಂಪನಿಯು, ನ್ಯಾಷನಲ್ ಹೆರಾಲ್ಡ್‌ನ ಮಾಲೀಕತ್ವ ಹೊಂದಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಅತ್ಯಲ್ಪ ಮೊತ್ತಕ್ಕೆ ಸ್ವಾಧೀನಪಡಿಸಿಕೊಂಡಿದೆ ಎಂದು ಇಡಿ ಹೇಳಿದೆ.

 

error: Content is protected !!
Scroll to Top