ಅಡ್ಯಾರು ಕಟ್ಟೆ ಯುವಕರ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಪೆಟ್ರೋಲ್ ಕೇಳುವ ನೆಪದಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರದಂದು ನಡೆದಿದೆ.

ಮಂಗಳೂರಿನ ಖಾಸಗಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೇರಳದ ಮಲಪ್ಪುರಂ ನಿವಾಸಿ ಸಾಜಿದ್ (23) ಹಾಗೂ ಆತನ ಸ್ನೇಹಿತ ನೌಫಲ್ ನ ಮೇಲೆ ದಾಳಿ ನಡೆಸಿದ ಆರೋಪಿಗಳಾದ ಅರ್ಕುಳ ನಿವಾಸಿ ನಿತಿನ್ ಪೂಜಾರಿ(21), ಕೆಂಜೂರು ನಿವಾಸಿ ಪ್ರಾಣೇಶ್ ಪೂಜಾರಿ(20) ಹಾಗೂ ಅಳಪೆ ಕಂಡೇವು ನಿವಾಸಿ ಕಿಶನ್ ಪೂಜಾರಿ(21) ಯವರನ್ನು ಬಂಧಿಸಿದ್ದಾರೆನ್ನಲಾಗಿದೆ. ಆರೋಪಿಗಳ ಪೈಕಿ ನಿತಿನ್ ಹಾಗೂ ಪ್ರಾಣೇಶ್ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಹಿಂದಿನ ಪ್ರಕರಣಗಳಲ್ಲಿ ಆರೋಪಿತರಾಗಿದ್ದು, ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸ್ ಕಮೀಷನರ್ ಶ್ರೀ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಶ್ರೀ.ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಶ್ರೀ ಹನುಮಂತರಾಯ ಮತ್ತು ಎಸಿಪಿ ಸಿಸಿಬಿ ಶ್ರೀ ವೆಲೆಂಟೈನ್ ಡಿ ಸೋಜಾ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

 

error: Content is protected !!

Join the Group

Join WhatsApp Group