(ನ್ಯೂಸ್ ಕಡಬ) newskadaba.com, ಮೇ 01: ಕೇಂದ್ರ ಸರ್ಕಾರದ ಪ್ರಾಯೋಜಿತ ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳ ಅನುಷ್ಠಾನಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯು 607 ಕಿ.ಮೀ. ಉದ್ದದ ಕಾರಿಡಾರ್ ಆಗಿದ್ದು, ರಾಜ್ಯದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 101 ಕಿ.ಮೀ. ವ್ಯಾಪ್ತಿಯಲ್ಲಿದೆ.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನಿಲುಗಡೆ ಇರಲಿದ್ದು, ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ. ಈ ಯೋಜನೆಗೆ ಆಡಳಿತಾತ್ಮಕ ಹಾಗೂ ಶಾಸನಬದ್ಧ ಅಂಗೀಕಾರವನ್ನು ಸಚಿವ ಸಂಪುಟ ಸಭೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇದೇ ವೇಳೆ ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೂ ಅಂಗೀಕಾರ ನೀಡಲಾಗಿದೆ. ಈ ಯೋಜನೆಯಿಂದ ರಾಜ್ಯದ ಕೋಲಾರ, ಬಂಗಾರಪೇಟೆ, ವೈಟ್ಫೀಲ್ಡ್, ಬೈಯಪ್ಪನಹಳ್ಳಿ ಭಾಗಗಳ ನಾಗರಿಕರಿಗೆ ಚೆನ್ನೈ ಪ್ರಯಾಣಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.









