(ನ್ಯೂಸ್ ಕಡಬ) newskadaba.com, ಮೇ.20: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು ತೆರಳಿದ್ದ ವೇಳೆ, ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಈ ದುರ್ಘಟನೆ ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಇವರು ಉಜಿರೆಯ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳೀಯರು ನದಿಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಿದರು. ಸ್ಥಳೀಯ ನಿವಾಸಿಗಳು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಸ್ಥಳಕ್ಕೆ ಧಾವಿಸಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದರು.
ಕೊನೆಗೆ ರಾತ್ರಿ 9:30ರ ಸುಮಾರಿಗೆ ಯುವಕನ ಶವ ನದಿಯಲ್ಲಿ ಪತ್ತೆಯಾಗಿದ್ದು, ಹೊರತೆಗೆಯಲಾಗಿದೆ.ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷಕ (ಎಸ್ಐ) ಸಮರ್ಥ್ ಆರ್. ಗಾಣಿಗೇರ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.









