(ನ್ಯೂಸ್ ಕಡಬ) newskadaba.com, ಮೇ.24: ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವು ಮುಂಬರುವ ಜೂನ್ ತಿಂಗಳಿನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹೊಸ ರೈಲು ಸಂಚಾರಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಹೇಳಿದರು.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಬೆಂಗಳೂರು-ಕಾರವಾರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೇಡಿಕೆ ಬಗ್ಗೆ ಮಾತನಾಡಿದ ಸಚಿವರು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಸಂಸದರು ಇದ್ದಾರೆ. ಅವರ ಬೇಡಿಕೆಯನ್ನು ಪರಿಶೀಲಿಸಬೇಕಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಸಕಲೇಶಪುರ-ಕುಕ್ಕೆ ಸುಬ್ರಹ್ಮಣ್ಯ ಮಾರ್ಗವರೆಗೆ 55 ಕಿ.ಮೀ. ದೂರ ವಿದ್ಯುದೀಕರಣ ಕಾಮಗಾರಿ ಮುಕ್ತಾಯಗೊಂಡಿದೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವೆ ಪೂರ್ತಿಯಾಗಿ ವಿದ್ಯುದೀಕರಣವಾಗಿದ್ದು, ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶಗಳು ತೆರೆದುಕೊಂಡಿವೆ ಎಂದರು









