(ನ್ಯೂಸ್ ಕಡಬ) newskadaba.com,ಜೂ.20 ಬೆಂಗಳೂರು: ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಕೇರಳ ಮೂಲದ ಯುವಕರನ್ನು ನಂಬಿಸಿ, ಅವರಿಂದ 20 ಲಕ್ಷಕ್ಕೂ ಅಧಿಕ ಹಣವನ್ನು ದರೋಡೆ ಮಾಡಿದ ಆರೋಪದ ಮೇಲೆ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಮೂವರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಕುಪೇಂದ್ರ ರೆಡ್ಡಿ ಮತ್ತು ವಸಂತ್ ಕುಮಾರ್ ಬಂಧಿತ ಇತರ ಆರೋಪಿಗಳು.
ಆನ್ಲೈನ್ ಟ್ರೇಡಿಂಗ್ನಲ್ಲಿ 25 ಲಕ್ಷ ರೂ. ಹೂಡಿಕೆ ಮಾಡಿದರೆ 50 ಲಕ್ಷ ರೂ. ನೀಡುವುದಾಗಿ ಕೇರಳದ ಯುವಕರಿಗೆ ಆಮಿಷ ಒಡ್ಡಲಾಗಿತ್ತು.ಇದನ್ನು ನಂಬಿ ಯುವಕರು ಮಡಿವಾಳದ ಹೋಟೆಲ್ಗೆ ಬಂದಾಗ, ಇನ್ಸ್ಪೆಕ್ಟರ್ ಜೀಪ್ನಲ್ಲಿ ಬಂದ ಆರೋಪಿಗಳು ಪೊಲೀಸ್ ಅಧಿಕಾರಿಗಳಂತೆ ನಟಿಸಿ, ಗುರುತಿನ ಚೀಟಿ ತೋರಿಸಿ ಬೆದರಿಸಿದ್ದಾರೆ. ಬಳಿಕ ಯುವಕರ ಮೇಲೆ ಹಲ್ಲೆ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದಾರೆ.
ಸಂತ್ರಸ್ತರ ದೂರಿನ ಮೇರೆಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಡಕಾಯಿತಿ, ಒಳಸಂಚು ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಮಡಿವಾಳ ಎಸಿಪಿ ವಾಸುದೇವ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಆರೋಪಿಗಳು ಈ ಹಿಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಯೇ ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಯೇ ಎಂಬ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.













