(ನ್ಯೂಸ್ ಕಡಬ) newskadaba.com, ಜೂ.25 ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಜೂನ್ 12ರಂದು ಸಂಭವಿಸಿದ ಸ್ಕೂಟಿ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾನೆ.ಮೃತ ಬಾಲಕ ಬೆಳಾಲು ನಿವಾಸಿ, ನಿವೃತ್ತ ಯೋಧ ಮೋಹನ್ ಗೌಡ ಕಾಡಂಡ ಅವರ ಪುತ್ರ ಹಾಗೂ ಉಜಿರೆಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದನು.
ತಂದೆ ಮೋಹನ್ ಗೌಡ ಅವರು ಮಗ ದಿಯಾನ್ನನ್ನು ಸ್ಕೂಟಿಯಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ತಾಂತ್ರಿಕ ದೋಷದಿಂದಾಗಿ ವಾಹನಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಬಾಲಕನಿಗೆ ತೀವ್ರ ಸುಟ್ಟ ಗಾಯಗಳಾಗಿದ್ದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. ಅಪಘಾತದಲ್ಲಿ ಗಾಯಗೊಂಡಿದ್ದ ತಂದೆ ಮೋಹನ್ ಗೌಡ ಅವರು ಸದ್ಯ ಚೇತರಿಸಿಕೊಂಡಿದ್ದಾರೆ.









