(ನ್ಯೂಸ್ ಕಡಬ) newskadaba.com, ಜು.10 :ರಾಜ್ಯದ ಮುಜರಾಯಿ ದೇವಸ್ಥಾನಗಳ ಭದ್ರತೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಎ, ಬಿ, ಮತ್ತು ಸಿ ವರ್ಗದ ಎಲ್ಲಾ ಪ್ರಮುಖ ದೇವಸ್ಥಾನಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ದೇವಸ್ಥಾನಗಳ ಪ್ರವೇಶ ದ್ವಾರ, ಗರ್ಭಗುಡಿ ಆವರಣ, ಕಾಣಿಕೆ ಹುಂಡಿ ಇರುವ ಸ್ಥಳ ಹಾಗೂ ಪ್ರಸಾದ ವಿತರಣಾ ಕೇಂದ್ರಗಳಲ್ಲಿ ಅತ್ಯಾಧುನಿಕ ಸಿಸಿಟಿವಿಗಳನ್ನು ಅಳವಡಿಸಲಾಗುವುದು.ಭಕ್ತರಿಗೆ ವಿತರಿಸುವ ಪ್ರಸಾದದ ಸುರಕ್ಷತೆಗಾಗಿ ವಿತರಣಾ ಕೇಂದ್ರಗಳಲ್ಲಿ ಅಗತ್ಯ ಭದ್ರತಾ ಸಿಬ್ಬಂದಿ ನಿಯೋಜನೆ.
ಕಾಣಿಕೆ ಹುಂಡಿ ತೆರೆಯುವ ಮತ್ತು ಹಣ ಎಣಿಕೆ ಮಾಡುವ ಸಂಪೂರ್ಣ ಪ್ರಕ್ರಿಯೆಯು ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿಯೇ ನಡೆಯಬೇಕು.ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ರಾತ್ರಿ ವೇಳೆ ಗಸ್ತು ಹೆಚ್ಚಿಸಲು ಸೂಚನೆ. ಭದ್ರತಾ ಲೋಪ ಕಂಡುಬಂದರೆ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲು ನಿರ್ಧಾರ.
ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಈ ನಿಯಮ ತಕ್ಷಣದಿಂದಲೇ ಜಾರಿಗೆ ಬರಲಿದೆ.









