(ನ್ಯೂಸ್ ಕಡಬ) newskadaba.com ಜು. 13. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾದೇಶಿ ಕಾರ್ಮಿಕರು ಪತ್ತೆಯಾಗಿರುವ ಹಿನ್ನಲೆ ಕಮಿಷನರೆಟ್ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಕಾರ್ಯಾಚರಣೆ ಕೈಗೊಳ್ಳುವಂತೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನಿರ್ದೇಶನ ನೀಡಿದ್ದಾರೆ.
ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಕೈಗಾರಿಕೆ ಹಾಗೂ ಮೀನುಗಾರಿಕೆ ಸಹಿತ ವಿವಿಧೆಡೆಗಳಲ್ಲಿ ದುಡಿಯುವ ಕಾರ್ಮಿಕ ವರ್ಗದಲ್ಲಿ ಬಾಂಗ್ಲಾ ಪ್ರಜೆಗಳು ಸೇರಿಕೊಂಡಿರುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಜತೆಗೆ ಉದ್ಯಮಿಗಳು, ಗುತ್ತಿಗೆದಾರರು, ಮಾಲಕರು ಕೂಡಾ ತಮ್ಮಲ್ಲಿರುವ ಕಾರ್ಮಿಕರ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಒಂದು ವೇಳೆ ಅಕ್ರಮ ಬಾಂಗ್ಲಾ ಪ್ರಜೆಗಳು ಇರುವುದು ಪತ್ತೆಯಾದಲ್ಲಿ ಆಯಾ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಮೌಖಿಕ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಕೂಡಾ ತಮ್ಮ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ವಾಸವಿದ್ದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಮಾಹಿತಿ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಮುಕ್ಕದಲ್ಲಿ ಪತ್ತೆಯಾಗಿರುವ 8 ಮಂದಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಬಂಧನ ಕೇಂದ್ರದಲ್ಲಿಯೇ ಇರಿಸಲಾಗಿದೆ.









