(ನ್ಯೂಸ್ ಕಡಬ) newskadaba.com ಜು. 15. 7ನೇ ತರಗತಿಯ 13 ವರ್ಷದ ವಿದ್ಯಾರ್ಥಿಯೊಬ್ಬ ಮನೆಯ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಯಸಂದ್ರ ನಿವಾಸಿಯಾದ ಈ ಬಾಲಕ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ಮಂಗಳವಾರದಂದು ಸಂಜೆ ಶಾಲೆಯಿಂದ ಮರಳಿದ ವಿದ್ಯಾರ್ಥಿ, ಮನೆಯ ಕಟ್ಟಡದ ಮೇಲಿಂದ ಕೆಳಗೆ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾನೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಆತನನ್ನು ನಾಯಂಡನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗೆ ಹೊಡೆದು ಅವಮಾನಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಶಿಕ್ಷಕರ ಕಿರುಕುಳವೇ ಅಥವಾ ಬೇರೆ ಏನಾದರೂ ಕಾರಣವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿಯ ಈ ನಿರ್ಧಾರಕ್ಕೆ ನಿಖರ ಕಾರಣ ಏನೆಂಬುದನ್ನು ಪತ್ತೆಹಚ್ಚಲು ತನಿಖೆ ಕೈಗೊಂಡಿದ್ದಾರೆ.













