(ನ್ಯೂಸ್ ಕಡಬ) newskadaba.com, ಜು.18 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿ ತನ್ನ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್ ಟೈಂ ಕೆಲಸ ನಿರ್ವಹಿಸುತ್ತಿದ್ದ.ಮನೆಯ ಮೇಲ್ಭಾಗದ ಪ್ರತ್ಯೇಕ ಕೊಠಡಿಯಲ್ಲಿದ್ದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಆನ್ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಇದೇ ಆತ್ಮಹತ್ಯೆಗೆ ಪ್ರೇರೇಪಿಸಿರಬಹುದು ಎಂದು ಶಂಕಿಸಲಾಗಿದೆ.ಪ್ರಸ್ತುತ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ನೆಲಮಂಗಲ ಶವಗಾರಕ್ಕೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.









