(ನ್ಯೂಸ್ ಕಡಬ) newskadaba.com ಜು. 20. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ಮನೆಯ ಹಿಂಭಾಗದಲ್ಲಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣ ಭಸ್ಮವಾದ ಘಟನೆ ಬೆಳ್ತಂಗಡಿ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು–ಕುಕ್ಕಾಜೆ ಎಂಬಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ.
ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಜಾನುವಾರುಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು. ಘಟನಾ ಸ್ಥಳಕ್ಕೆ ಗ್ರಾಮ ಕರಣಿಕರ ಸಹಾಯಕರು ಹಾಗೂ ಮಾಜಿ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.









