(ನ್ಯೂಸ್ ಕಡಬ) newskadaba.com, ಜು.26: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಭಾವ ಉಂಟಾಗಿ ನದಿಯಲ್ಲಿ ನೀರಿನ ಹರಿವು ತೀವ್ರ ಕಡಿಮೆಯಾದ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿರುವ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ನಿತ್ಯ 42 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು 1,450 ಕ್ಯೂಸೆಕ್ ನೀರಿನ ಅಗತ್ಯವಿತ್ತು. ನದಿಯಲ್ಲಿ ಸಮರ್ಪಕ ಹರಿವಿಲ್ಲದೆ ಕಳೆದ ಒಂದೂವರೆ ತಿಂಗಳಿಂದ ಉತ್ಪಾದನೆ ಬಂದ್ ಆಗಿದೆ.
ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಂದ ನೀರು ಹರಿಯದ ಹಿನ್ನೆಲೆಯಲ್ಲಿ, ಹಲವು ವರ್ಷಗಳ ಬಳಿಕ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಪರಿಸ್ಥಿತಿ ಎದುರಾಗಿದೆ.









