ಜಿಲ್ಲಾಮಟ್ಟದ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ”

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಮೈ ಭಾರತ್ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್), ಮಂಗಳೂರು ವಿಶ್ವವಿದ್ಯಾನಿಲಯ, ಯೂತ್ ರೆಡ್ ಕ್ರಾಸ್ ಹಾಗೂ ಶ್ರೀ ರಾಮಕೃಷ್ಣ ಕಾಲೇಜು, ಮಂಗಳೂರು ಸಂಯುಕ್ತ ಆಶ್ರಯದಲ್ಲಿ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ” (ಮಾದಕ ದ್ರವ್ಯ ಮುಕ್ತ ಯುವಕರಿಂದ ವಿಕಸಿತ ಭಾರತ) ಎಂಬ ವಿಷಯದಡಿ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಶ್ರೀ ರಾಮಕೃಷ್ಣ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಮಿಥುನ್ ಎಚ್.ಎನ್ ಉದ್ಘಾಟಿಸಿ, ಮಾತನಾಡಿ, ಪ್ರತಿಯೊಬ್ಬ ಯುವಕ-ಯುವತಿಯೂ ಜೀವನದ ಮೌಲ್ಯವನ್ನು ಅರಿತು “ಮಾದಕ ದ್ರವ್ಯಕ್ಕೆ ಬೇಡ, ಜೀವನಕ್ಕೆ ಹೌದು” (Say No to Drugs, Yes to Life) ಎಂಬ ಸಂಕಲ್ಪದೊಂದಿಗೆ ಸಮಾಜದಲ್ಲಿ ಮಾದರಿಯಾಗಬೇಕು ಎಂದು ಕರೆ ನೀಡಿದರು. ಬಳಿಕ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ” ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎ.ಎನ್.ಎಮ್. ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ 300ಕ್ಕೂ ಅಧಿಕ ವಿದ್ಯಾರ್ಥಿಗಳು ಸಮೂಹ ಗಾನ, ಸಮೂಹ ನೃತ್ಯ, ರೀಲ್ಸ್ ತಯಾರಿ, ಮೂಕಾಭಿನಯ,  ಕವನವಾಚನ, ಭಾಷಣ ಸ್ಪರ್ಧೆ, ಘೋಷವಾಕ್ಯ ಬರಹ ಹಾಗೂ ಚಿತ್ರಕಲೆ ಸೇರಿದಂತೆ ಒಟ್ಟು 8 ವಿಭಾಗಗಳ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪ್ರತಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮತ್ತು ಸ್ಪರ್ಧಿಗಳು ಮುಂಬರುವ ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ  ಮೈ ಭಾರತ್ ಉಪನಿರ್ದೇಶಕ ಉಲ್ಲಾಸ್ ಕೆ.ಟಿ, ಶ್ರೀ ರಾಮಕೃಷ್ಣ ಕಾಲೇಜು ಪ್ರಾಂಶುಪಾಲೆ ಡಾ. ಅನಸೂಯ ರೈ, ಉಪ ಪ್ರಾಂಶುಪಾಲೆ ಪ್ರತಿಮಾ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯ ಎನ್‍ಎಸ್‍ಎಸ್ ಸಂಯೋಜಕ ಡಾ. ಶೇಷಪ್ಪ ಕೆ., ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಸಂಯೋಜಕ ಜೋಯ್ಸನ್, ಶ್ರೀ ರಾಮಕೃಷ್ಣ ಕಾಲೇಜಿನ ಯೂತ್ ರೆಡ್ ಕ್ರಾಸ್ ಯೋಜನಾಧಿಕಾರಿ ಸುಮನ ರೈ, ಮಂಗಳೂರು ವಿಶ್ವವಿದ್ಯಾನಿಲಯದ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಗಾಯತ್ರಿ ಮತ್ತಿತ್ತರರು ಉಪಸ್ಥಿತರಿದ್ದರು.

Scroll to Top