(ನ್ಯೂಸ್ ಕಡಬ) newskadaba.com, ಆ.19 ಬೆಂಗಳೂರು: ಡೀಸೆಲ್ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರಕಾರಿ ಬಸ್ ಪ್ರಯಾಣ ದರ ಪರಿಷ್ಕರಣೆಯಾಗುವ ಸ್ಪಷ್ಟ ಸುಳಿವನ್ನು ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ್ದಾರೆ.
ಟಿಕೆಟ್ ದರ ಪರಿಷ್ಕರಣೆ ಕುರಿತು ಪರಿಶೀಲಿಸಲು ಅತುಲ್ ಕುಮಾರ್ ತಿವಾರಿ ನೇತೃತ್ವದ ಕರ್ನಾಟಕ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ಸಮಿತಿಯು ನಾಲ್ಕೂ ಸಾರಿಗೆ ನಿಗಮಗಳು ಹಾಗೂ ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಶೀಘ್ರದಲ್ಲೇ ವರದಿ ನೀಡಲಿದೆ. ವರದಿ ಬಂದ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಪ್ರತಿ ವರ್ಷ ನಾಲ್ಕೂ ಸಾರಿಗೆ ನಿಗಮಗಳು ಒಟ್ಟಾಗಿ 8,000 ದಿಂದ 10,000 ಕೋಟಿ ರೂ.ಗಳಷ್ಟು ಬೃಹತ್ ನಷ್ಟ ಅನುಭವಿಸುತ್ತಿವೆ. ತೈಲ ಬೆಲೆ ಏರಿಕೆಯಿಂದ ಸಂಸ್ಥೆಗಳನ್ನು ನಡೆಸುವುದು ಕಷ್ಟವಾಗಿದ್ದು, ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಸಮಂಜಸ ದರ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.








