ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ► ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭದಲ್ಲಿ ಬಾಲಕೃಷ್ಣ ಬಳ್ಳೇರಿ

(ನ್ಯೂಸ್ ಕಡಬ) ‌‌‌‌‌ newskadaba.com ಕಡಬ, ಫೆ.06. ನಾವು ಎಷ್ಟೇ ಪ್ರಯತ್ನಪಟ್ಟರೂ ಮದ್ಯಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ, ದುಷ್ಚಟಗಳ ಮಹಾಮಾರಿಯಾಗಿರುವ ಮದ್ಯವ್ಯಸನದ ನಿರ್ಮೂಲನೆ ಮಾಡಿ ಸಮೃದ್ಧ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ ಹೇಳಿದರು. ಅವರು ಮಂಗಳವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಒಂದು ವಾರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆದ 1326 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಗ್ರಾಮೀಣ ಪ್ರದೇಶದ ಮದ್ಯಮ ಹಾಗೂ ಬಡ ಕುಟುಂಬಗಳು ತಮ್ಮ ದುಡಿಮೆಯನ್ನೆಲ್ಲಾ ದುಷ್ಚಟಕ್ಕೆ ಬಳಸಿ ಬದುಕು ಕಳೆದುಕೊಂಡಾಗ ಧರ್ಮಸ್ಥಳ ಯೋಜನೆ ಆಶಾ ಕಿರಣವಾಗಿ ಮೂಡಿಬಂದು ಮದ್ಯವರ್ಜನ ಶಿಬಿರಗಳನ್ನು ನಡೆಸಿ ಹೊಸ ಜೀವನ ಕಲ್ಪಿಸುವ ಪುಣ್ಯದ ಕಾರ್ಯ ಮಾಡುತ್ತಿದೆ, ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದು ಶಿಬಿರಾರ್ಥಿಗಳ ಕರ್ತವ್ಯವಾಗಬೇಕು ಎಂದು ಬಳ್ಳೇರಿ ಹೇಳಿದರು. ತಾಲೂಕು ಪಂಚಾಯಿತಿ ಸದಸ್ಯ ಗಣೇಶ್ ಕೈಕುರೆ ಮಾತನಾಡಿ ವ್ಯಕ್ತಿಯನ್ನು ಶಕ್ತಿಯಾಗಿ ಮಾಡುವ ಯೋಜನೆಯ ಕಾರ್ಯ ಇಡೀ ಮನುಕುಲಕ್ಕೆ ಮಾದರಿ ಎಂದರು.

ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಭಟ್ ಕಲ್ಪುರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿರ್ದೆಶಕ ವಿವೇಕ್ ವಿನ್ಸೆಂಟ್ ಪಾಯಸ್, ಪುತ್ತೂರು ತಾಲೂಕು ಅಧ್ಯಕ್ಷ ಪದ್ಮನಾಭ ಶೆಟ್ಟಿ, ಕಡಬ ವಲಯಾಧ್ಯಕ್ಷ ಲಕ್ಷ್ಮೀನಾರಾಯಣ ರಾವ್ ಆತೂರು, ಮದ್ಯವರ್ಜನ ಶಿಬಿರದ ಗೌರವಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಶುಭ ಹಾರೈಸಿದರು. ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯಅಧ್ಯಕ್ಷತೆವಹಿಸಿದ್ದರು. ಎ.ಪಿ.ಎಂ.ಸಿ ನಿರ್ದೆಶಕರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ತಾಲೂಕು ಪಂ ಸದಸ್ಯೆ ಪಿ.ವೈ ಕುಸುಮಾ, ನಿವೃತ್ತ ಶಿಕ್ಷಕ ಸಾಂತಪ್ಪ ಗೌಡ ಪಿಜಕಳ, ಶಿಬಿರದ ವೈದ್ಯಾದಿಕಾರಿ ಡಾ|ಮೋಹನ ಗೌಡ ಕೊಕ್ಕಡ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರನ್ನು ಗೌರವಿಸಲಾಯಿತು. ಶಿಬಿರಾರ್ಥಿಗಳಿಗೆ ನಡೆದ ಆಟೋಟ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ಶಿಬಿರಾಧಿಕಾರಿ ನಾಗರಾಜ್ ವಿಜೇತರ ಪಟ್ಟಿ ವಾಚಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕು ಯೋಜನಾಧಿಕಾರಿ ಜನಾರ್ಧನ ಎಸ್ ಸ್ವಾಗತಿಸಿದರು. ಕಡಬ ವಲಯ ಮೇಲ್ವಿಚಾರಕ ಬಾಬು ವಂದಿಸಿದರು. ಸಾಮಾಜಿಕ ಕಾರ್ಯಕರ್ತ ಶಿವಪ್ರಸಾದ್ ರೈ ಮೈಲೇರಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!

Join the Group

Join WhatsApp Group