►► ವಿಶೇಷ ಲೇಖನ: ಮಾರ್ಚ್ 06 – ದಂತ ವೈದ್ಯರ ದಿನ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಮಾ.06. ಮಾರ್ಚ್ 6 ರಂದು ದೇಶಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿಕೊಂಡಿಲ್ಲ. ತಲೆ ತಲಾಂತರಗಳಿಂದ ದಂತ ವೈದ್ಯರನ್ನು “ಖಳ ನಾಯಕ”ನ ರೀತಿಯಲ್ಲಿ ಚಿತ್ರಿಸಲಾಗಿದೆ ಮತ್ತು ಜನಮಾನಸದಲ್ಲಿ ದಂತ ವೈದ್ಯರ ಬಗ್ಗೆ ಭೀತಿಯ ಕಲ್ಪನೆ ಇನ್ನೂ ತೊಲಗಿಲ್ಲದಿರುವುದೇ ಸೋಜಿಗದ ಮತ್ತು ದೌರ್ಭಾಗ್ಯದ ಸಂಗತಿ.

ಯಾವೊಬ್ಬ ವ್ಯಕ್ತಿಯೂ ನೋವಿಲ್ಲದೇ ದಂತ ವೈದ್ಯರ ಬಳಿ ಬರಲು ಹಿಂದೇಟು ಹಾಕುವುದಂತೂ ಸತ್ಯ. ದಂತ ವೈದ್ಯರ ದಂತ ಕುರ್ಚಿ ಮಾತ್ರ ಇನ್ನೂ ಹೆಚ್ಚಿನವರಿಗೆ ಮುಳ್ಳಿನ ಹಾಸಿಗೆಯಾಗಿ ಉಳಿದಿರುವುದೇ ಬಹು ದೊಡ್ಡ ಜೀರ್ಣಿಸಿಕೊಳ್ಳಲಾಗದ ಸತ್ಯ. ಹಿಂದಿನ ಕಾಲದಲ್ಲಿ ವೈಜ್ಞಾನಿಕತೆ, ತಂತ್ರಜ್ಞಾನ ಮತ್ತು ಕೌಶಲ್ಯಗಳ ಕೊರತೆಯಿಂದಾಗಿ ದಂತ ವೈದ್ಯಕೀಯ ಕ್ಷೇತ್ರ ಅಂದರೆ ಜನರಲ್ಲಿ ಒಂದು ರೀತಿಯ ಅವ್ಯಕ್ತ ಭಯ ಕಾಡುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಹೊಸ ಹೊಸ ಆವಿಷ್ಕಾರ ಬಂದಿದೆ. ತಂತ್ರಜ್ಞಾನ ಮತ್ತು ವೈದ್ಯ ವಿಜ್ಞಾನದಲ್ಲಿ ಅಪಾರ ಬದಲಾವಣೆ ಉಂಟಾಗಿದೆ. ಹಾಗಾಗಿ ದಂತ ವೈದ್ಯಕೀಯ ಕ್ಷೇತ್ರ ಈಗ ಮೊದಲಿನಂತೆ ಉಳಿದಿಲ್ಲ. ದಂತ ವೈದ್ಯಕೀಯ ಆಸ್ಪತ್ರೆ ಎಂದರೆ ಯಾವುದೋ ಹೊಸ ಲೋಕಕ್ಕೆ ಎಂದಂತೆ ಭಾಸವಾಗುವ ರೀತಿಯಲ್ಲಿ ಮಾರ್ಪಾಡಾಗಿದೆ. ವಿಶಾಲವಾದ ಜಾಗ, ಮೆತ್ತನೆಯ ದೇಹದಾಕೃತಿಯ ದಂತ ಕುರ್ಚಿ, ಹವಾನಿಯಂತ್ರಿತ ವಾತಾವರಣ, ಕಿವಿಗೊಪ್ಪುವ ಲಘು ಸಂಗೀತ… ಹಾಗೇ ಬಹಳಷ್ಟು ಬದಲಾವಣೆ ಉಂಟಾಗಿದೆ. ದಂತ ವೈದ್ಯಕೀಯ ಚಿಕಿತ್ಸೆ ಈಗ ಬರೀ ನೋವು ನಿವಾರಕ ವ್ಯವಸ್ಥೆಗಿಂತಲೂ ಸೌಂದರ್ಯವರ್ಧಕ ಚಿಕಿತ್ಸೆಯಾಗಿ ಬದಲಾಗಿರುವುದು ಖಂಡಿತವಾಗಿಯೂ ಸತ್ಯ. ಇಷ್ಟೆಲ್ಲಾ ಬದಲವಣೆಯಾಗಿದ್ದರೂ ಜನರು ಮಾತ್ರ ದಂತ ವೈದ್ಯರ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳನ್ನು ಹೊಂದಿರುವುದು ಸೋಜಿಗವೇ ಸರಿ. ಅದೇನೋ ಇರಲಿ ನಿಮ್ಮ ನೋವನ್ನು ಶಮನ ಮಾಡುವ ನಿಮ್ಮನ್ನು ಸದಾ ನಗಿಸಲು ಮತ್ತು ಹಸನ್ಮುಖಿಯಾಗಿ ಇರುವಂತೆ ಶುಭ್ರ ದಂತಪಂಕ್ತಿಗಳಿಗಾಗಿ ಸದಾಕಾಲ ಶ್ರಮ ಪಡುವ ದಂತ ವೈದ್ಯರನ್ನು ಸ್ಮರಿಸುವ ಮತ್ತು ಒಂದು ಪುಟ್ಟ ಥ್ಯಾಂಕ್ಸ್ ಹೇಳುವ ದಿನ ಮಾರ್ಚ್ 6 ಎಂಬುದಂತೂ ನಿಜ.

ಯಾಕಾಗಿ ದಂತ ವೈದ್ಯರ ದಿನ ಆಚರಿಸಲಾಗುತ್ತದೆ?
1. ಬಾಯಿ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಜಾಗೃತಿ ಮೂಡಿಸುವ ಉದ್ದೇಶದಿಂದ ಆಚರಣೆ ಮಾಡಲಾಗುತ್ತಿದೆ.
2. ದಂತ ಸಂಬಂಧಿ ರೋಗಗಳಾದ ದಂತ ಕ್ಷಯ, ದಂತ ಕುಳಿ, ದಂತ ಸವೆತ, ದಂತ ಅತಿ ಸಂವೇದನೆ ಮುಂತಾದ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ.
3. ದಂತ ಆರೋಗ್ಯ ಮತ್ತು ಬಾಯಿ ಆರೋಗ್ಯಕ್ಕೆ ಪೂರಕವಾದ ಹವ್ಯಾಸಗಳ ಬಗ್ಗೆ ಜನರಲ್ಲಿ ಒಲವು ಮೂಡಿಸುವ ಉದ್ದೇಶದಿಂದಾಗಿ ಈ ಆಚರಣೆ ಮಾಡಲಾಗುತ್ತಿದೆ.
4. ಮಕ್ಕಳಲ್ಲಿ ದಂತ ಸಂಬಂಧಿ ರೋಗಗಳನ್ನು ತಡೆಯುವ ಬಗ್ಗೆ ಮತ್ತು ಮಕ್ಕಳಲ್ಲಿ ದಂತ ರಕ್ಷಣೆಯ ಬಗ್ಗೆ ಒಲವು ಮೂಡಿಸುವ ಉದ್ದೇಶದಿಂದ.
5. ಮುಖ ಮನಸ್ಸಿನ ಕನ್ನಡಿ ಇದ್ದಂತೆ. ಸುಂದರವಾದ ದಂತ ಪಂಕ್ತಿಗಳಿಂದ ಕೂಡಿದ ನಗು ಮುಖದ ಅಂದವನ್ನು ಹೆಚ್ಚಿಸುತ್ತದೆ. ಜನರ ಹಲ್ಲನ್ನು ಸರಿಪಡಿಸಿ ನಗುವಿನ ಮಾದಕತೆ ಹೆಚ್ಚಿಸುವಂತೆ ಪ್ರೇರೇಪಿಸಿ ರೋಗಿಗಳ ಆತ್ಮವಿಶ್ವಾಸವನ್ನು ವೃದ್ಧಿಸುವ ಸದುದ್ದೇಶದಿಂದ ಈ ಆಚರಣೆ ಮಾಡಲಾಗುತ್ತಿದೆ.
6. ದಂತ ಆರೋಗ್ಯವನ್ನು ವೃದ್ಧಿಸುವ ಹವ್ಯಾಸಗಳಾದ ದಂತದಾರ ಬಳಕೆ, ದಂತ ಕುಂಚಗಳ ಸೂಕ್ತ ಬಳಕೆ, ದಂತ ಚೂರ್ಣಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಮೂಲ ಉದ್ದೇಶದೊಂದಿಗೆ ದಂತ ವೈದ್ಯರ ದಿನ ಆಚರಿಸಲಾಗುತ್ತಿದೆ.

Also Read  ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

ದಂತ ವೈದ್ಯರ ದಿನದ ಸಂದೇಶ:
1. ದಿನಕ್ಕೆರಡು ಬಾರಿ ಕನಿಷ್ಠ ಮೂರು ನಿಮಿಷಗಳ ಕಾಲ ಹಲ್ಲುಜ್ಜಬೇಕು.
2. ದಿನಕ್ಕೊಮ್ಮೆಯಾದರೂ ದಂತದಾರ ಅಥವಾ ದಂತ ಬಳ್ಳಿ ಬಳಸಿ ಹಲ್ಲುಗಳ ಸಂದುಗಳನ್ನು ಶುಚಿಗೊಳಿಸಿ
3. ಕನಿಷ್ಠ ಆರು ತಿಂಗಳಿಗೊಮ್ಮೆ ದಂತ ವೈದ್ಯರನ್ನು ಭೇಟಿ ಮಾಡಬೇಕು. ಹಲ್ಲು ನೋವು ಬಂದಾಗ ಮಾತ್ರ ದಂತ ವೈದ್ಯರ ಭೇಟಿ ಮಾಡುವುದು ಸರಿಯಾದ ಕ್ರಮವಲ್ಲ.
4. ನೀವು ಸೇವಿಸುವ ಆಹಾರದ ಮೇಲೆ ನಿಗಾ ಇರಲಿ. ಸಮತೋಲಿತ ಮತ್ತು ಹಲ್ಲಿನ ಆರೋಗ್ಯಕ್ಕೆ ಪೂರಕವಾದ ನಾರುಯುಕ್ತ ಹಣ್ಣು ಹಂಪಲು, ಹಸಿ ತರಕಾರಿ ಯುಕ್ತ ಆಹಾರ ಸೇವಿಸಿ. ಇಂಗಾಲಯುಕ್ತ ಕೃತಕ ಪೇಯಗಳನ್ನು ತ್ಯಜಿಸಬೇಕು. ತಾಜಾ ಹಣ್ಣಿನ ರಸ, ಕಬ್ಬಿನ ಹಾಲು ಎಳನೀರು ಮುಂತಾದ ನೈಸರ್ಗಿಕ ಪೇಯಗಳನ್ನು ಸೇವಿಸಬೇಕು.
5. ಎರಡೂ ಊಟಗಳ ನಡುವೆ ಸಿಹಿ ಪದಾರ್ಥ ಮತ್ತು ಅಂಟು ಪದಾರ್ಥಗಳನ್ನು ಸೇವಿಸುವುದನ್ನು ಕಡಿಮೆ ಮಾಡಿ. ಅನಿವಾರ್ಯವಾದಲ್ಲಿ ಸೇವಿಸಿದ ಬಳಿಕ ಚೆನ್ನಾಗಿ ಬಾಯಿ ಮುಕ್ಕಳಿಸಬೇಕು.
6. ಪ್ರತಿ ನಿತ್ಯ ರಾತ್ರಿ ಮಲಗುವ ಮುನ್ನ ಮೌತ್‍ವಾಶ್ ಬಳಸುವ ಹವ್ಯಾಸ ಮಾಡಿಕೊಳ್ಳಿ. ಕನಿಷ್ಠ ಪಕ್ಷ ಬಿಸಿ ನೀರಿಗೆ ಒಂದು ಚಿಟಿಕೆ ಉಪ್ಪುಹಾಕಿ. ಆ ದ್ರಾವಣದಿಂದ ಬಾಯಿ ಶುಚಿಗೊಳಿಸಬೇಕು.
7. ಪ್ರತಿ ವರ್ಷದಲ್ಲಿ ಒಮ್ಮೆಯಾದರೂ ದಂತ ವೈದ್ಯರ ಬಳಿ ಹಲ್ಲು ಶುಚಿಗೊಳಿಸಬೇಕು. ಇದರಿಂದ ಬಾಯಿವಾಸನೆ, ವಸಡಿನ ಉರಿಯೂತ ಮತ್ತು ವಸಡಿನಲ್ಲಿ ರಕ್ತ ಒಸರುವುದು ನಿಯಂತ್ರಣಕ್ಕೆ ಬರುತ್ತದೆ.
8. ಹಲ್ಲುನೋವು ಬಂದಾಗ ಸ್ವಯಂ ಔಷಧಿಗಾರಿಕೆ ಮಾಡಿಕೊಂಡು ನೋವು ನಿವಾರಕ ಔಷಧಿ ತೆಗೆದುಕೊಳ್ಳುವುದು ಬಹಳ ಅಪಾಯಕಾರಿ. ದಂತ ವೈದ್ಯರ ಸಲಹೆ ಅತೀ ಅಗತ್ಯ.

Also Read  ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕೊನೆಮಾತು:
ಮೊದಲೆಲ್ಲಾ ವೈದ್ಯ ವೃತ್ತಿಯನ್ನು ಪವಿತ್ರವಾದ ವೃತ್ತಿ ಎಂದು ಕರೆಯಲಾಗುತ್ತಿತ್ತು. ಕಾಲಕ್ರಮೇಣ ಬಹಳಷ್ಟು ಬದಲಾವಣೆಗಳಾದವು ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಕಾಲಘಟ್ಟದಲ್ಲಿ ವೈದ್ಯಕೀಯ ವೃತ್ತಿಯಲ್ಲಿಯೂ ಬಹಳಷ್ಟು ಪರಿವರ್ತನೆಯಾಯಿತು. ಮೊದಲಿದ್ದ ವೈದ್ಯ- ರೋಗಿಯ ಸಂಬಂಧ ಈಗೀಗ ಮೊದಲಿನಂತೆ ಉಳಿದಿಲ್ಲ. ಎಲ್ಲವನ್ನೂ ಸಂಶಯದ ದೃಷ್ಟಿಯಿಂದ ನೋಡುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದರಲ್ಲಿ ರೋಗಿ ಮತ್ತು ವೈದ್ಯರ ತಪ್ಪೂಇದೆ. ಪ್ರತಿ ವೈದ್ಯ ಮತ್ತು ರೋಗಿ ತನ್ನ ಹೊಣೆಗಾರಿಕೆ, ವೃತ್ತಿ ಧರ್ಮ ಮತ್ತು ಇತಿಮಿತಿಯೊಳಗೆ ವ್ಯವರಿಸಿದ್ದಲ್ಲಿ ಈ ರೀತಿಯ ಸಂಘರ್ಷ ತಪ್ಪಿಸಬಹುದು. ಅವರಲ್ಲೇ ಇಬ್ಬರ ಒಳಿತು ಮತ್ತು ಸಮಾಜದ ಒಳಿತೂ ಅಡಗಿದೆ. ಸಾವು ಸಮೀಪಿಸಿದಾಗ ವೈದ್ಯ ದೇವರಾಗಿಯೂ, ಚಿಕಿತ್ಸೆ ಆರಂಭಿಸಿದಾಗ ದೇವಮಾನವನಾಗಿಯೂ, ಚಿಕಿತ್ಸೆ ಫಲಿಸಿದಾಗ ಸಾಮಾನ್ಯ ಮನುಷ್ಯನಾಗಿಯೂ, ಶುಲ್ಕ ಕೇಳಿದಾಗ ಧನದಾಹಿ ಎಂದೂ, ಚಿಕಿತ್ಸೆ ಫಲಿಸದಾಗ ಕೊಲೆಗಡುಕ ಎಂದೂ ಜನರು ವೈದ್ಯರನ್ನೂ ಹಾಡಿ ಹೊಗಳುತ್ತಾರೆ ಮತ್ತು ತೆಗಳುತ್ತಾರೆ. ಆದರೆ ಈ ಎಲ್ಲಾ ಹೊಗಳಿಕೆಗೆ ಹಿಗ್ಗದೆ ತೆಗಳಿಕೆಗೆ ಕುಗ್ಗದೆ ಸಮಚಿತ್ತದಿಂದ ವರ್ತಿಸಿ ವೃತ್ತಿ ಧರ್ಮವನ್ನು ಪಾಲಿಸಿ ರೋಗಿಯು ಗುಣಮುಖವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುವವನೇ ನಿಜವಾದ ವೈದ್ಯ. ಅಂತಹ ವೈದ್ಯ ನಾರಾಯಣನಾಗದಿದ್ದರೂ ಮನುಷ್ಯನಾಗುವುದಂತೂ ಖಂಡಿತ ಸತ್ಯ. ಈ ರೀತಿ ತನ್ನ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳ ಸೇವೆ ಮಾಡುತ್ತಿರುವ ನೂರಾರು ದಂತ ವೈದ್ಯರು ನಮ್ಮ ಸಮಾಜದಲ್ಲಿ ಇದ್ದಾರೆ. ಅವರು ಹಾಕಿದ ಆದರ್ಶ ಮತ್ತು ತತ್ವಗಳು ಇತರರಿಗೆ ಮಾದರಿಯಾಗಲಿ. ದಂತ ವೈದ್ಯರ ದಿನದಂದು ನನ್ನೆಲ್ಲಾ ದಂತ ವೈದ್ಯ ಸಹೋದ್ಯೋಗಿ ಬಂಧುಗಳಿಗೆ ಶುಭಾಶಯ ಕೋರುತ್ತೇನೆ. ಗೆಳೆಯರೇ, ಇನ್ಯಾಕೆ ತಡಮಾಡುತ್ತೀರಾ ಮೊಬೈಲ್ ಎತ್ತಿಕೊಂಡು ನಿಮ್ಮ ದಂತ ವ್ಶೆದ್ಯರಿಗೆ ಪ್ರೀತ್ಯಾಧರದಿಂದ ಅಭಿನಂಧನೆ ಸಲ್ಲಿಸುವ ಸಂದೇಶ ಅಥವಾ ವಾಟ್ಸ್ಸಫ್ ಸಂದೇಶ ಇಲ್ಲವೇ ವೈಬರ್ ಸಂದೇಶ ಕಳುಹಿಸಿ. ಹಗಲಿರುಳು ನಿಮ್ಮ ನೋವುಗಳಿಗೆ ಸ್ಪಂದಿಸುವ ಆ ಜೀವಕ್ಕೆ ನಿಮ್ಮ ಪ್ರೀತಿಯ ಸಂದೇಶ ಅಮೃತ ಸಿಂಚನ ಮಾಡೀತು ಮತ್ತು ವ್ಶೆದ್ಯರಿಗೆ ನವಚೈತನ್ಯನೀಡಿ ಇನ್ನೊಂದು ಜೀವ ಉಳಿಸುವ ಮತ್ತು ನೋವು ಶಮನಗೊಳಿಸುವ ಶಕ್ತಿ ನೀಡಲೂ ಬಹುದು.

Also Read  ಈ ನಕ್ಷತ್ರದಲ್ಲಿ ಹುಟ್ಟಿದ ವ್ಯಕ್ತಿಗಳು ಜನ್ಮ ಕೊಟ್ಟ ತಂದೆ ತಾಯಿಗೆ ಕಂಟಕವಾಗಿರುತ್ತಾರೆ ಅದರಿಂದ ಹೊರ ಬರುವುದಕ್ಕೆ ಪರಿಹಾರ

ಡಾ|| ಮುರಲೀ ಮೋಹನ್ ಚೂಂತಾರು
ಸುರಕ್ಷಾದಂತ ಚಿಕಿತ್ಸಾಲಯ, ಹೊಸಂಗಡಿ

error: Content is protected !!
Scroll to Top