ರಾಜ್ಯಾದ್ಯಂತ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ ➤ ತಮ್ಮ ಭವಿಷ್ಯ ಬರೆಯಲಿರುವ 8 ಲಕ್ಷ ವಿದ್ಯಾರ್ಥಿಗಳು

ಸಾಂದರ್ಭಿಕ ಚಿತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ರಾಜ್ಯಾದ್ಯಂತ ಇಂದಿನಿಂದ ಎಪ್ರಿಲ್ 04 ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಇಂದಿನಿಂದ ನಡೆಯಲಿರುವ ಪರೀಕ್ಷೆಯಲ್ಲಿ 4,47,864 ಗಂಡು ಮಕ್ಕಳು, 3,93,802 ಹೆಣ್ಣು ಮಕ್ಕಳು ಸೇರಿದಂತೆ 8,41,666 ವಿದ್ಯಾರ್ಥಿಗಳು ಅದೃಷ್ಟ ಪರೀಕ್ಷೆಯನ್ನು ಎದುರಿಸಲಿದ್ದಾರೆ. 4651 ವಿಕಲಚೇತನ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1451 ಅರ್ಹ ವಿಕಲಚೇತನರಿಗೆ ಭಾಷಾ ವಿನಾಯಿತಿ ಹಾಗೂ 480 ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯಗಳನ್ನು ಬರೆಯಲು ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಒಟ್ಟು 2847 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಅವುಗಳಲ್ಲಿ 46 ಸೂಕ್ಷ್ಮ ಹಾಗೂ 7 ಅತಿಸೂಕ್ಷ್ಮ ಕೇಂದ್ರಗಳು ಎಂದು ಗುರುತಿಸಲಾಗಿದೆ. ಅಲ್ಲದೆ 1057 ಕ್ಲಸ್ಟರ್‌ ರಹಿತ ಹಾಗೂ 1698 ಕ್ಲಸ್ಟರ್ ಕೇಂದ್ರಗಳು ಎಂದು ವಿಂಗಡಿಸಲಾಗಿದೆ. ಖಾಸಗಿ ಅಭ್ಯರ್ಥಿಗಳಿಗಾಗಿ ಜಿಲ್ಲಾ ಕೇಂದ್ರಗಳಲ್ಲಿ 92 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಗಳನ್ನು ನಮೂದಿಸಲಾಗುತ್ತಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದ್ದು, ಮೊಬೈಲ್, ಸ್ಮಾರ್ಟ್‌ಪೋನ್, ಸ್ಮಾರ್ಟ್ ವಾಚ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ನಿಷೇಧಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮುನ್ನ 15 ನಿಮಿಷಗಳ ಕಾಲ ಪ್ರಶ್ನೆಪತ್ರಿಕೆ ಓದಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೊಳಗಾಗದೆ ನಿರ್ಭೀತರಾಗಿ ಪರೀಕ್ಷೆಯನ್ನು ಬರೆಯಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

error: Content is protected !!

Join the Group

Join WhatsApp Group