ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ ಧನ್ ಯೋಜನೆ-ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18   ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆಯಡಿ ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಟೋ ಚಾಲಕರು, ವಾಣಿಜ್ಯ ವಾಹನ ಚಾಲಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಮಂಡಕ್ಕಿ ಭಟ್ಟಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಬಿಸಿಯೂಟ ಸಿದ್ದಪಡಿಸುವ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಿಗಳು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಕೃಷಿ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು, ಗೃಹ ಆಧಾರಿತ ಕಾರ್ಮಿಕರು ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆಯಡಿ ನೋಂದಣಿ ಮಾಡಬಹುದು.

ನೋಂದಣಿ  ಪ್ರಕ್ರಿಯೆ: ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು ಅವರ ಮಾಸಿಕ ಆದಾಯ ರೂ.15000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ  ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಯ ವ್ಯಾಪ್ತಿಗೆ  ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು, ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬಹುದು. ಸಿ.ಎಸ್.ಸಿಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ಇ.ಎಸ್.ಐ ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಚೇರಿಗಳಿಂದ ಪಡೆಯಬಹುದು, ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ ( ಬ್ಯಾಂಕ್ ಪಾಸ್ ಪುಸ್ತಕ/ ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್‍ಮೆಂಟ್) ತಮ್ಮ ನಾಮನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್‍ಸೆಟ್‍ನೊಂದಿಗೆ ಕಾಮನ್ ಸರ್ವೀಸ್ ಸೆಂಟರ್ ಗಳಿಗೆ ಬರಬೇಕು, ಅನುಬಂಧದಲ್ಲಿ ತಿಳಿಸಿರುವಂತೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಬೇಕು ನಂತರ ಮಾಸಿಕ ವಂತಿಕೆಯನ್ನು  ಅವರ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ, ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸಲಾಗುತ್ತದೆ. ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ ರೂ.3000 ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ, ಚಂದಾದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದ್ದಲ್ಲಿ, ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ, 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು, ಫಲಾನುಭವಿಯ ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರು 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ, ಅವನ/ಅವಳ ಸಂಗಾತಿಯುತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ ಅತವಾ ವಂತಿಕೆಯನ್ನು ಬಟ್ಟಿಯೊಂದಿಗೆ ಪಡೆಯಲು ಅರ್ಹರಾಗಿರುತ್ತಾರೆ, ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ, ಅವರ ಪತ್ನಿ/ಪತಿ ಮಾತ್ರ ಪಿಂಚಣಿಯ ಶೇ.50%ರಷ್ಟು ಪಿಂಚಣಿಯನ್ನು ಪಡೆಯಬಹುದು, ಯೋಜನೆಯು ವಿದ್ಯುನ್ಮಾನ ಆದಾರಿತವಾಗಿದ್ದು ಎಸ್.ಎಂ.ಎಸ್ ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ತಿಳಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿಗಳು, ಎಲ್.ಐ.ಸಿ ಶಾಖಾ ಕಚೇರಿ,  ಇಪಿಎಫ್‍ಒ ಮತ್ತು ಇಎಸ್‍ಐಸಿ ಕಚೇರಿಗಳು,  ಸಿ.ಎಸ್.ಸಿ  ಸೆಂಟರ್,  ಟೋಲ್ ಫ್ರೀ ಸಂಖ್ಯೆ 1800-276-6888 ಸಂಪರ್ಕಿಸಬಹುದು ಎಂದು  ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1&2, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group