ಮಣಿಪಾಲ, ಡಿ.28: ನ್ಯುಮೋನಿಯಾದಿಂದ ಬಳಲುತ್ತಿರುವ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಇನ್ನಷ್ಟು ಚಿಂತಾಜನಕವಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ. ಹಾಗೆಯೇ ಇಂದಿನಿಂದ ಗಣ್ಯರ ಭೇಟಿಗೆ ನಿರ್ಭಂದ ಮಾಡಲಾಗಿದೆ.

ಶುಕ್ರವಾರ ಮಣಿಪಾಲ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ತಿಳಿಸಿದೆ. ಸ್ವಾಮೀಜಿ ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಜೀವರಕ್ಷಕ ಸಾಧನಗಳ ಸಹಾಯದಲ್ಲಿ ಅವರಿದ್ದಾರೆ ಎಂದು ಹೇಳಿದ್ದಾರೆ. ಶುಕ್ರವಾರ ರಾತ್ರಿ ಪೇಜಾವರ ಶ್ರೀಗಳ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು ಇಂದು ಮತ್ತೊಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಲಿದೆ. ಈ ಎರಡರ ವರದಿ ಬಂದ ಬಳಿಕ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದೆ ಎಂದು ವರದಿಯಾಗಿದೆ. ಡಿಸೆಂಬರ್ 19ರಂದು ಸ್ವಾಮೀಜಿಯವರು ಜ್ವರದಿಂದ ಬಳಲುತ್ತಿದ್ದರೂ ಎರಡು ಮೂರು ಕಾರ್ಯಕ್ರಮಗಳನ್ನು ಮುಗಿಸಿ ಉಡುಪಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸ್ವಲ್ಪ ಗುಣಮುಖರಾಗಿ ಮಠಕ್ಕೆ ಮರಳಿದ್ದರು. ಆದರೆ ಡಿ.20ರಂದು ಮುಂಜಾನೆ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.










