ಕೋಟ ಜೋಡಿ ಕೊಲೆ ಪ್ರಕರಣ: ಆರೋಪಿ ಜಿಪಂ ಸದಸ್ಯನ ಜಾಮೀನು ವಜಾ

ಕುಂದಾಪುರ, ಜ.22: ಮಣೂರು ಗ್ರಾಮದ ಚಿಕ್ಕನಕೆರೆ ಜೋಡಿ ಕೊಲೆ ಪ್ರಕರಣದ ಆರೋಪಿ, ಉಡುಪಿ ಜಿಲ್ಲಾ ಪಂಚಾಯತ್ ಕೋಟ ಕ್ಷೇತ್ರ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್(38)ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಜ.20ರಂದು ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಒಳಸಂಚು ರೂಪಿಸಿದ ಆರೋಪದಡಿ ಫೆ.8ರಂದು ರಾಘವೇಂದ್ರ ಕಾಂಚನ್‌ನನ್ನು ಪೊಲೀಸರು ಬಂಧಿಸಿದ್ದರು. ಈತ ಈ ಹಿಂದೆ ಜಾಮೀನು ಕೋರಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದನು. ಆದರೆ ನ್ಯಾಯಾಲಯ ಈತನ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಜುಲೈ ತಿಂಗಳಲ್ಲಿ ರಾಜ್ಯ ಹೈಕೋರ್ಟ್ ಈತನಿಗೆ ಶರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.

Also Read  ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

ಇದನ್ನು ಪ್ರಶ್ನಿಸಿ ಹತ್ಯೆಯಾದ ಭರತ್ ಎಂಬವರ ತಾಯಿ ಪಾರ್ವತಿ, ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿಯನ್ನು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರ ಹಾಗೂ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರ ದ್ವಿಸದಸ್ಯ ಪೀಠ ರಾಘವೇಂದ್ರ ಕಾಂಚನ್‌ನ ಜಾಮೀನು ವಜಾಗೊಳಿಸಿ ಆದೇಶ ನೀಡಿದೆ. ಪಾವರ್ತಿ ಪರವಾಗಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಚಂದ್ರಶೇಖರ್ ವಾದಿಸಿದ್ದರು.

ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೌಚಾಲಯ ಹೊಂಡದ ವಿಚಾರ ದಲ್ಲಿ ಜ. 26ರಂದು ಭರತ್(30) ಹಾಗೂ ಯತೀಶ್ ಕಾಂಚನ್(25) ಎಂಬವರನ್ನು ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಾಘವೇಂದ್ರ ಕಾಂಚನ್ ಸೇರಿದಂತೆ ಒಟ್ಟು 18 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

Also Read  ಉಳ್ಳಾಲ: ಗೃಹ ಪ್ರವೇಶದ ಮನೆಯಲ್ಲಿ ಕಳ್ಳನ ಕೈಚಳಕ

error: Content is protected !!
Scroll to Top