ಹೊಸದಿಲ್ಲಿ, ಫೆ.14: 40 ಮಂದಿ ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರರ ದಾಳಿಗೆ ಇಂದಿಗೆ (ಫೆ.14) ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆ ವೀರ ಯೋಧರಿಗೆ ನಮನ ಸಲ್ಲಿಸಿದೆ.

ದಾಳಿಗೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ವಿವಿಧೆಡೆ ಹಲವು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ಶ್ರೀನಗರದಲ್ಲಿರುವ ಸ್ಮಾರಕದಲ್ಲಿ ಯೋಧರಿಗೆ ಸಿಆರ್’ಪಿಎಫ್ ಶ್ರದ್ಧಾಂಜಲಿ ಸಲ್ಲಿಸಲಿದೆ. ಪುಲ್ವಾಮಾದ ಲೆತ್ ಪೋರಾದಲ್ಲಿರುವ ಸಿಆರ್’ಪಿಎಪ್ ತರಬೇತಿ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ ಹುತಾತ್ಮ ಯೋಧರನ್ನು ಸ್ಮರಿಸಲಿದ್ದಾರೆ.








