ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ

  • ಸಹಜ ಸ್ಥಿತಿಯತ್ತ ರಾಷ್ಟ್ರ ರಾಜಧಾನಿ

ಹೊಸದಿಲ್ಲಿ, ಫೆ.28: ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.

ಈ ಕುರಿತಂತೆ ದಿಲ್ಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದಿಲ್ಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ.

ಪ್ರಸ್ತುತ ದಿಲ್ಲಿ ಶಾಂತಿಯುತವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ ಮರಳುತ್ತಿವೆ. ಅಂಗಡಿ ಮುಂಗಟ್ಟುಗಳನ್ನು ತೆರೆಯಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸರಿ ಸುಮಾರು 7,000ಕ್ಕೂ ಅಧಿಕ ಪ್ಯಾರಾಮಿಲಿಟರಿ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಅಲ್ಲದೆ ನೂರಾರು ಪೊಲೀಸರು ಹಿಂಸಾಚಾರಕ್ಕೆ ತುತ್ತಾಗಿದ್ದ ಈಶಾನ್ಯ ದಿಲ್ಲಲಿಯ ಜಾಫ್ರಾಬಾದ್, ಮೌಜ್‌ಪುರ, ಚಂದ್ ಬಾಗ್, ಖುರೇಜಿ ಖಾಸ್ ಮತ್ತು ಭಜನ್‌ಪುರ್‌ನಲ್ಲಿ ಮೊಕ್ಕಾಂ ಹೂಡಿದ್ದು, ಶಾಂತಿ ಸುವ್ಯವಸ್ಥೆಯ ಪಾಲನೆಯಲ್ಲಿ ತೊಡಗಿದ್ದಾರೆ.

Scroll to Top