ಬಂಟ್ವಾಳ: ಕೆಲಸದ ವೇಳೆ ಕೊರೋನಾ ಹರಡಿರುವ ಭೀತಿ ➤ ಪೆಟ್ರೋಲ್ ಬಂಕ್ ಉದ್ಯೋಗಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.27. ಜಗತ್ತಿನಾದ್ಯಂತ ಇತ್ತೀಚೆಗೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ರೋಗವು ತನಗೆ ತಗುಲಿರಬಹುದು ಎಂದು ಭಯಗೊಂಡು ಪೆಟ್ರೋಲ್ ಬಂಕ್ ಉದ್ಯೋಗಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಮೇರಮಜಲು ಗ್ರಾಮದ ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ (56) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ರೋಗವು ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿರುವ ತನಗೂ ತಗುಲಿರಬಹುದು ಎಂದು ಭಯಗೊಂಡಿದ್ದು, ಹಾಗೂ ತನಗೆ ಈ ರೋಗ ತಗುಲಿದ್ದಲ್ಲಿ ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾದ ಅವರು ಗುರುವಾರ ಮಧ್ಯರಾತ್ರಿಯ ವೇಳೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top