ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಬಿ.ಎಸ್.ವೈ ಮನವಿ

ಬೆಂಗಳೂರು, ಎ.5: ಕೊರೋನ ಪ್ರಕರಣಗಳ ಸಂಖ್ಯೆ ತ್ವರಿತಗತಿಯಲ್ಲಿ ಏರಿಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಾಜ್ಯದ ಜನತೆ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿಶ್ವದಾದ್ಯಂತ ಕೊರೋನ ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನರ ಜೀವ ರಕ್ಷಣೆಗಾಗಿ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಹ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಿದೆ. ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದ ಜನತೆ ಲಾಕ್‌ಡೌನ್‌ನ ಹಿಂದಿನ ಆಶಯವನ್ನು ಹಾಗೂ ಲಾಕ್‌ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್‌ಡೌನ್ ಆದೇಶ ಪಾಲಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೊರೋನ ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಪ್ರಧಾನ ಮಂತ್ರಿಯವರು ಸೂಚಿಸಿರುವ ದೇಶವ್ಯಾಪ್ತಿ ಲಾಕ್‌ಡೌನ್ ಅವಧಿಯು ಎಪ್ರಿಲ್ 14ರಂದು ಮುಕ್ತಾಯಗೊಳ್ಳುತ್ತಿದ್ದು, ಈ ಲಾಕ್‌ಡೌನನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ವೈ ಮನವಿ ಮಾಡಿದ್ದಾರೆ.

error: Content is protected !!

Join the Group

Join WhatsApp Group