ಬೆಂಗಳೂರು: ಕೊರೋನಾ ವಾರಿಯರ್ ತಂಡದ ಮೇಲೆ ಕಿಡಿಗೇಡಿಗಳ ದಾಳಿ ➤ 54 ಪುಂಡರ ಬಂಧನ, ಮತ್ತಷ್ಟು ಆರೋಪಿಗಳಿಗಾಗಿ ಶೋಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ಬೆಂಗಳೂರಿನ ಪಾದರಾಯನಪುರ ಎಂಬಲ್ಲಿ ಕೊರೋನಾ ವಾರಿಯರ್ ತಂಡದ ಮೇಲೆ ದಾಳಿ ನಡೆಸಿದ 54 ಕಿಡಿಗೇಡಿಗಳನ್ನು ಬಂಧಿಸಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಗೃಹಸಚಿವರು, ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಲಾಗಿದ್ದು, ಘಟನೆ ನಡೆದು ಕೆಲವೇ ಗಂಟೆಗಳಲ್ಲಿ 54 ಮಂದಿಯನ್ನು ಬಂಧಿಸಲಾಗಿದೆ. ಇನ್ನುಳಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಬಂಧಿತರ ವಿರುದ್ಧ ಎನ್‌ಡಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಘಟನೆ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಕೋವಿಡ್ ತಡೆಗೆ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ. ಜನತೆ ಸರ್ಕಾರದ ಜತೆ ಸಹಕರಿಸಬೇಕು. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಮಸ್ಯೆ ಮಾಡಿದರೆ ಕಠೋರ ಕ್ರಮ ಜರುಗಿಸಲಾಗುವುದು ಎಂದವರು ಎಚ್ಚರಿಸಿದ್ದಾರೆ.

error: Content is protected !!

Join the Group

Join WhatsApp Group