ರಾಜ್ಯದಲ್ಲಿಂದು 299 ಮಂದಿಗೆ ಕೋವಿಡ್: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಬೆಂಗಳೂರು, ಮೇ 31: ರಾಜ್ಯದಲ್ಲಿ ಇಂದು 299 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,221ಕ್ಕೇರಿಕೆಯಾಗಿದೆ. ಅಲ್ಲದೆ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗರಿಷ್ಠ ಪ್ರಮಾಣದ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಯಚೂರಿನಲ್ಲಿ 83, ಯಾದಗಿರಿಯಲ್ಲಿ 44, ಬೀದರ್‌ನಲ್ಲಿ 33, ಬೆಂಗಳೂರು ನಗರದಲ್ಲಿ 21, ದಕ್ಷಿಣ ಕನ್ನಡದಲ್ಲಿ 14, ವಿಜಯಪುರದಲ್ಲಿ 26, ಬೆಳಗಾವಿ ಮತ್ತು ಮಂಡ್ಯದಲ್ಲಿ ತಲಾ 13 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ಅಂತೆಯೇ ಬೀದರ್ ಮತ್ತು ರಾಯಚೂರಿನಲ್ಲಿ ಇಬ್ಬರು ಸೋಂಕಿತರು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನ ವೈರಸ್‌ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 1,218 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,950 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 15 ಕೊರೋನ ಪೀಡಿತರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

Scroll to Top